ಕೋಲಾರದಿಂದಲೇ ಅನರ್ಹತೆಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಪ್ಲಾನಿಂಗ್
ಕೋಲಾರ : ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಸಮುದಾಯದ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ನಿರ್ಧರಿಸಿದ್ದಾರೆ. ಏಪ್ರಿಲ್ 5 ರಂದು ರಾಹುಲ್ ಗಾಂಧಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಲಿದ್ದಾರೆ.
ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ ಆರಂಭಿಸಿ, ಅನರ್ಹಗೊಳಿಸಿದ್ದನ್ನೇ ಪ್ರಚಾರದ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ.ಎಚ್.ಮುನಿಯಪ್ಪ ಪರ ಕೋಲಾರದಲ್ಲಿ ನಡೆದ ಪ್ರಚಾರದಲ್ಲಿ ರಾಹುಲ್ ಗಾಂಧಿ ಮೋದಿ ಹೆಸರುಳ್ಳವರೆಲ್ಲ ಕಳ್ಳರು ಎಂದು ಬಾಷಣ ಮಾಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಹೆಸರಿನವರು ಎಲ್ಲರೂ ಕಳ್ಳರು. ಈ ಎಲ್ಲಾ ಕಳ್ಳರು ಸೇರಿ ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಹೇಳಿದ್ದರು. ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ, ಮುಳಬಾಗಿಲಿನ ರೋಡ್ ಶೋ ವೇಳೆಯಲ್ಲಿ ಹಾಗೂ ಕೆಜಿಎಫ್ನ ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಬಹಿರಂಗ ಸಮಾವೇಶದ ವೇಳೆಯಲ್ಲೂ ರಾಹುಲ್ ಗಾಂಧಿ ಇದೇ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದರು.
ರಾಹುಲ್ ಗಾಂಧಿ ಹೇಳಿಕೆ ವಿರೋಧಿಸಿ ಗುಜರಾತ್ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಸೂರತ್ನಲ್ಲಿ ದೂರು ನೀಡಿದ್ದರು. ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಮಾಡಿದ ಟೀಕೆ ಇಡೀ ಮೋದಿ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಎಂದು ನೀಡಿದ್ದರು. ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ (ಮಾನಹಾನಿ) ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿಯವರು ಮೂರು ಬಾರಿ ಸೂರತ್ ಕೋರ್ಟ್ಗೆ ಹಾಜರಾಗಿದ್ದರು. ಈಗ ಕೋರ್ಟ್ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
























