ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಶನಿವಾರ ರಾತ್ರಿ ಘೋಷಿಸಿದ್ದಾರೆ. ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಅವರ ಮನೆಗೆ ಆಗಮಿಸಿ ಮನವೊಲಿಕೆಗೆ ಯತ್ನಿಸಿದರು. ಆದರೆ ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾಗಿದೆ.
ಸಂಧಾನ ಸಭೆ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಮೂವತ್ತು ವರ್ಷದ ರಾಜಕಾರಣದಲ್ಲಿ ಕಳೆದ ಮೂರು ತಿಂಗಳು ಮಾತ್ರ ಅತ್ಯಂತ ಕೆಟ್ಟ ದಿನ. ನಾನು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷವನ್ನು ಕೆಳ ಮಟ್ಟದಿಂದ ಕಟ್ಟಿದ್ದೇನೆ. ಪಕ್ಷ ನನಗೆ ಎಲ್ಲ ಗೌರವ ಕೊಟ್ಟಿದೆ. ಹೀಗಾಗಿ ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಇಲ್ಲ. ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ ಎಂದರು.
ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತ. ನಾಳೆಯೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top