ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಆರಂಭಿಸಲಾಗಿದೆ.
ಈ ಕುರಿತು ರೈತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಡಿಸೆಂಬರ್ 30ರಿಂದ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನ್ ಮೂಲಕ ತಾವೇ ಸ್ವತಃ ದಾಖಲಿಸಬಹುದಾಗಿದೆ.
ಡೌನ್ಲೋಡ್ ಮಾಡಿಕೊಳ್ಳಿ;
ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇಸ್ಟೋರ್ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ Rabi Season Farmer Crop Survey 2023-24 ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬಹುದಾಗಿದೆ.
ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ದಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಉಪಯೋಗಿಸಲಾಗುತ್ತಿದೆ.
ರೈತರು ತಾವೇ ಸ್ವತಃ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ತಾವು ಬೆಳೆದ ಮಾಹಿತಿಯನ್ನು ನಿಖರವಾಗಿ ನೀಡುವುದರಿಂದ ಮುಂಬರುವ ವ್ಯತ್ಯಾಸವನ್ನು ತಡೆಯಬಹುದಾಗಿದೆ. ಬೆಳೆ ಸಮೀಕ್ಷೆ ಕೈಗೊಳ್ಳಲು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಪಿ.ಆರ್.ಗಳನ್ನು/ ಕೃಷಿ/ ತೋಟಗಾರಿಕೆ/ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.
ಬೆಳೆ ಸಮೀಕ್ಷೆಯನ್ನು ಮಾಡುವಾಗ ಮೊದಲ ಹಂತದಲ್ಲಿ ರೈತರಿಗೆ ಸಮೀಕ್ಷೆ ಮಾಡಲು ಅವಕಾಶ ನೀಡಲಾಗುತ್ತದೆ. ಆನಂತರ ಬೆಳೆ ಸಮೀಕ್ಷೆ ಮಾಡಲು ಗುತ್ತಿಗೆ ಆಧಾರದ ಮೇಲೆ ಖಾಸಗಿ ವ್ಯಕ್ತಿಗಳನ್ನು ಕಳುಹಿಸಲಾಗುತ್ತದೆ. ಮೂರನೇ ಹಂತದಲ್ಲಿ ಖಾಸಗಿ ವ್ಯಕ್ತಿಗಳು ಕೊಟ್ಟ ಮಾಹಿತಿಯನ್ನು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸಿದರಷ್ಟೇ ಬೆಳೆ ಸಮೀಕ್ಷೆ ಅಂತಿಮವಾಗಲಿದೆ. ಹೀಗಾಗಿ ರೈತರು ಪರಿಹಾರ ಸಿಗಲಿಲ್ಲ, ಬೆಳೆದ ಬೆಳೆಗೆ ಬದಲಾಗಿ ಬೇರೆ ಬೆಳೆ ನಮೂದಿಸಲಾಗಿದೆ ಎಂದು ದೂರು ಕೊಡುವುದನ್ನು ಬಿಟ್ಟು ಕಾಲಕಾಲಕ್ಕೆ ಬೆಳೆ ಸಮೀಕ್ಷೆಗೆ ಒತ್ತು ಕೊಡಬೇಕಿದೆ. ಪ್ರಕೃತಿ ವಿಕೋಪ ಆದಾಗ ನಷ್ಟದ ಸಮೀಕ್ಷೆ, ಬೆಳೆ ವಿಮೆ, ಬೆಂಬಲ ಬೆಲೆಯಡಿ ಖರೀದಿ, ಸಹಾಯಧನ, ಬೆಳೆ ಪರಿಹಾರ ಹೀಗೆ ಎಲ್ಲಕ್ಕೂ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ. ನಿಮ್ಮ ಜಮೀನಿನಲ್ಲಿ ಯಾವ ಬೆಳೆ ಬೆಳೆಯಾಗುತ್ತಿದೆ ಎನ್ನುವುದರ ಆಧಾರದ ಮೇಲೆ ಸರ್ಕಾರದ ಯೋಜನೆಗಳು ರೈತರಿಗೆ ಸಿಗಲಿವೆ. ಹೀಗಾಗಿ ಎಲ್ಲ ರೈತರು ತಮ್ಮ ಜಮೀನಿನ ದಾಖಲೆಗಳ ಕಡೆ ಗಮನಹರಿಸುವ ಹಾಗೆ ಬೆಳೆ ಸಮೀಕ್ಷೆಯನ್ನು ಮಾಡಬೇಕಿದೆ.