ಸಚಿವ ಎಂ.ಬಿ.ಪಾಟೀಲ್‌ಗೆ ಸುತ್ತಿಕೊಂಡ ಪ್ರಾಸಿಕ್ಯೂಷನ್‌ ಉರುಳು

ಕೆಐಎಡಿಬಿ ಸೈಟ್‌ ಹಂಚಿಕೆಯಲ್ಲಿ ಗೋಲ್‌ಮಾಲ್‌ ಆರೋಪ

ಬೆಂಗಳೂರು: ಪ್ರಾಸಿಕ್ಯೂಷನ್‌ ಉರುಳು ಈಗ ಸಚಿವ ಎಂ.ಬಿ.ಪಾಟೀಲ್‌ ಅವರಿಗೂ ಸುತ್ತಿಕೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಗರಣಕ್ಕೆ ಸಂಬಂಧಿಸಿದಂತೆ ಭಾರಿ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶುಕ್ರವಾರ ದೂರು ಸಲ್ಲಿಕೆಯಾಗಿದೆ.

ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಾಜಭವನದಲ್ಲಿ ದೂರು ದಾಖಲಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಮುಡಾ ನಿವೇಶನ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಮರ್ಥಿಸಿಕೊಳ್ಳಲು ಯತ್ನಿಸುತ್ತಿರುವ ಎಂ.ಬಿ ಪಾಟೀಲ್ ಗೆ ಇದು ಹಿನ್ನಡೆಯಾಗಿದೆ.





























 
 

ಸಚಿವ ಎಂಬಿ ಪಾಟೀಲ್ ಕೆಐಎಡಿಬಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಿಯಮಗಳ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಾಗಿತ್ತು. ಆದರೆ ಸಚಿವ ಪಾಟೀಲ್ ಕೈಗಾರಿಕೆಗಳನ್ನು ನಡೆಸದ ಕಂಪನಿಗಳಿಗೆ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ನಗರಕ್ಕೆ ಸಮೀಪವಿರುವ ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಮುಂತಾದ ಕೈಗಾರಿಕಾ ಪ್ರದೇಶಗಳ ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಲಾಗಿದೆ. ಕಾನೂನು ಪ್ರಕ್ರಿಯೆಗಳನ್ನು ಕಡೆಗಣಿಸಿ ನಿಯಮಗಳನ್ನು ಉಲ್ಲಂಘಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಸಚಿವರ ಕಾರ್ಯಕ್ಕೆ ಕೆಲವು ಅಧಿಕಾರಿಗಳು ಬೆಂಬಲ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಏಳು ಪುಟಗಳ ದೂರಿನಲ್ಲಿ ಸುಮಾರು 39 ಕಂಪನಿಗಳ ಪಟ್ಟಿ ನೀಡಲಾಗಿದ್ದು, ಅವುಗಳಿಗೆ ಸಿಎ ಸೈಟ್ ನೀಡಲಾಗಿದೆ. ಯಾವುದೇ ಪಾರದರ್ಶಕತೆ ಕಾಯ್ದುಕೊಳ್ಳಲಾಗಿಲ್ಲ. ಅಲ್ಲದೇ ಸಿಎ ಸೈಟ್‌ಗಳನ್ನು ಹಂಚಿಕೆ ಮಾಡಲು ನಕ್ಷೆಗಳನ್ನು ತಿರುಚಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಎಂ.ಬಿ.ಪಾಟೀಲ್ ಅಧಿಕಾರ ದುರುಪಯೋಗಪಡಿಸಿಕೊಂಡು ಖಾಸಗಿಯವರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಕ್ರಿಮಿನಲ್ ಅಪರಾಧ ಎಸಗಿದ್ದಾರೆ. ಆದ್ದರಿಂದ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಮತ್ತು 19 ಮತ್ತು ಬಿಎನ್‌ಎಸ್‌ನ ಸೆಕ್ಷನ್ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಬೇಕು ಎಂದು ದೂರುದಾರರು ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ.

ಎಂ.ಬಿ.ಪಾಟೀಲ್‌ ನಿರಾಕರಣೆ

ಸಿಎ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿರುವ ಆರೋಪವನ್ನು ಎಂ.ಬಿ.ಪಾಟೀಲ್ ನಿರಾಕರಿಸಿದ್ದಾರೆ. ಸಿಎ ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ. ಎಲ್ಲ ವಿಧಾನ ಅನುಸರಿಸಿ ಪಾರದರ್ಶಕವಾಗಿ ಹಂಚಿಕೆ ನಡೆದಿದೆ. ಕೆಲ ವಾರಗಳ ಹಿಂದೆ ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಆರೋಪ ಮಾಡಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಅದೇ ಅರ್ಜಿಯನ್ನು ಮತ್ತೆ ನೀಡಲಾಗಿದೆ ಎಂದು ಹೇಳಿದರು.
377.69 ಎಕರೆಯಲ್ಲಿ 193 ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ್ದು, 43 ನಿವೇಶನಗಳನ್ನು ಮಾತ್ರ ಮಂಜೂರು ಮಾಡಲಾಗಿದೆ. ಉಳಿದ ನಿವೇಶನಗಳು ಇನ್ನೂ ಹಂಚಿಕೆಯಾಗಿಲ್ಲ. ನಿರ್ದಿಷ್ಟ ಸೈಟ್‌ಗೆ ಒಂದೇ ಅರ್ಜಿ ಸ್ವೀಕರಿಸಿದ ಸಂದರ್ಭಗಳಲ್ಲಿ, ಅರ್ಹ ಅರ್ಜಿದಾರರಿಗೆ ಅವಕಾಶ ಸಿಗುವಂತೆ ನೋಡಿಕೊಳ್ಳಲು ಮತ್ತೆ ಅರ್ಜಿಗಳನ್ನು ಕರೆಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top