ಗೆಲ್ಲುವ ವಿಶ್ವಾಸದಲ್ಲಿ ಸಿದ್ದರಾಮಯ್ಯ ಪಾಳಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸುತ್ತಿಕೊಂಡಿರುವ ಮುಡಾ ಹಗರಣ ಇಂದು ಹೈಕೋರ್ಟಿನಲ್ಲಿ ಮತ್ತೆ ವಿಚಾರಣೆಗೆ ಬರಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ.
ಈಗಾಗಲೇ ನಾಲ್ಕು ಸಿಟ್ಟಿಂಗ್ಗಲ್ಲಿ ಕೋರ್ಟ್ ಈ ಕೇಸಿನ ವಿಚಾರಣೆ ನಡೆಸಿದ್ದು, ಇಂದು ವಿಚಾರಣೆ ಮುಕ್ತಾಯವಾಗುವ ನಿರೀಕ್ಷೆಯಿದೆ. ಸೆ.9ರಂದು ಮುಕ್ತಾಯಗೊಳಿಸಬೇಕೆಂದು ಸ್ವತಹ ನ್ಯಾಯಾಧೀಶರೇ ಹೇಳಿದ್ದಾರೆ. ಆದರೆ ಇಂದೇ ತೀರ್ಪು ಹೊರಬೀಳಬಹುದಾ ಅಥವಾ ತೀರ್ಪು ಪ್ರಕಟಕ್ಕೆ ನ್ಯಾಯಾಲಯ ದಿನಾಂಕ ನಿಗದಿ ಮಾಡಲಿದೆಯೇ ಎಂಬ ಕುತೂಹಲ ಇದೆ. ಹಗರಣವನ್ನು ರಾಜಕೀಯವಾಗಿ ಬಹಳ ಸಶಕ್ತವಾಗಿಯೇ ಎದುರಿಸಿರುವ ಸಿದ್ದರಾಮಯ್ಯ ಪಾಳಯ ಕೋರ್ಟಿನಲ್ಲಿ ಗೆಲುವಾಗುವ ನಿರೀಕ್ಷೆ ಇಟ್ಟುಕೊಂಡಿದೆ.
ರಾಜ್ಯಪಾಲರು ಸಿಎಂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣದ ವಾದ-ಪ್ರತಿವಾದ ಕೂಡ ಸಾಕಷ್ಟು ಕುತೂಹಲ ಕೆರಳಿಸಿತ್ತು. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಚಿವ ಸಂಪುಟ ಅಡ್ವೊಕೆಟ್ ಜನರಲ್ ಅಭಿಪ್ರಾಯ ಆಧರಿಸಿ ಶಿಫಾರಸು ಮಾಡಿತ್ತು. ಅಡ್ವೊಕೆಟ್ ಜನರಲ್ ನೀಡಿದ್ದ ಅಭಿಪ್ರಾಯದಂತೆ 91 ಪುಟಗಳ ಪ್ರತಿಕ್ರಿಯೆ ನೀಡಿತ್ತು. ಆದರೆ ಶಿಫಾರಸು ಮಾಡುವಾಗ ಸಚಿವ ಸಂಪುಟ ತನ್ನ ವಿವೇಚನೆ ಬಳಸಿಲ್ಲ. ಅಡ್ವೊಕೆಟ್ ಜನರಲ್ ಅಭಿಪ್ರಾಯವನ್ನೇ ಯಥಾವತ್ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಕಾಮಾ, ಫುಲ್ ಸ್ಟಾಪ್ ಕೂಡಾ ಬದಲಿಸಿಲ್ಲ ಅಂತಾ ತುಷಾರ್ ಮೆಹ್ತಾ ವಾದಿಸಿದ್ದಾರೆ. ಈ ವಾದಕ್ಕೆ ಅಡ್ವೊಕೆಟ್ ಜನರಲ್ ನೀಡಿದ್ದ ಕಾನೂನು ಅಭಿಪ್ರಾಯದ ಕುರಿತು ಇಂದು ವಾದ ನಡೆಯಲಿದೆ. ಶಶಿಕಿರಣ್ ಶೆಟ್ಟಿ ಸರ್ಕಾರದ ಕ್ರಮ ಮತ್ತು ತಮ್ಮ ಲೀಗಲ್ ಒಪಿನಿಯನ್ ಸಮರ್ಥಿಸಿಕೊಳ್ಳಲಿದ್ದಾರೆ.
ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ.
























