ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ

ಬೆಳಗಾವಿ: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಬೆಳಗಾವಿಯಲ್ಲಿ ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಚೂರಿ ಇರಿತ ಘಟನೆ ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಜಗಳ ಆಗಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​ ಗಲ್ಲಿಯ ಯುವಕರ ಗ್ಯಾಂಗ್​ನಿಂದ ಈ ಕೃತ್ಯ ಎಸಗಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್​ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಚೇಸ್​ ಮಾಡಿ ಹಿಡಿದಿದ್ದಾರೆ. ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ. ಆರೋಪಿಗಳು ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top