ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ

ಕ್ಷೇತ್ರದ ಪಾವಿತ್ರ್ಯ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದ ಆಂಧ್ರ ಸಿಎಂ

ಅಮರಾವತಿ: ಕೋಟ್ಯಂತರ ಹಿಂದುಗಳು ಪರಮ ಪವಿತ್ರ ಎಂಬ ನಂಬಿಕೆಯಿಂದ ಸ್ವೀಕರಿಸುವ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪವೊಂದು ಭಾರಿ ಕೋಲಾಹಲ ಉಂಟು ಮಾಡಿದೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ ಬಳಿಕ ಈ ಕುರಿತು ದೇಶಾದ್ಯಂತ ಚರ್ಚೆ ಶುರುವಾಗಿದೆ.

ಈ ಆರೋಪವನ್ನು ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ನೇತೃತ್ವದ ಪಕ್ಷ ಇದು ದುರುದ್ದೇಶಪೂರಿತವಾಗಿದೆ ಎಂದು ತಳ್ಳಿಹಾಕಿದೆ.
ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯವನ್ನು ಹಾಳು ಮಾಡಿದ್ದಾರೆ. ಅವರು ಅನ್ನದಾನದ ಗುಣಮಟ್ಟ ಕೆಡಿಸಿದ್ದಾರೆ. ಪವಿತ್ರ ತಿರುಮಲ ಲಡ್ಡಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ನಾವು ಈಗ ಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ತಿರುಮಲ ತಿರುಪತಿ ದೇವಸ್ಥಾನ ಪಾವಿತ್ರ್ಯವನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.





























 
 

ಚಂದ್ರಬಾಬು ನಾಯ್ಡು ತಿರುಮಲದ ಪಾವಿತ್ರ್ಯ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ಹಾಳು ಮಾಡಿದ್ದಾರೆ. ತಿರುಮಲ ಪ್ರಸಾದದ ಬಗ್ಗೆ ಅವರ ಹೇಳಿಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ. ಯಾವುದೇ ವ್ಯಕ್ತಿ ಇಂತಹ ಮಾತುಗಳನ್ನು ಆಡುವುದಿಲ್ಲ. ಅಂತಹ ಆರೋಪಗಳನ್ನು ಮಾಡುವುದಿಲ್ಲ ಎಂದು ರಾಜ್ಯಸಭಾ ಸಂಸದ ವೈ.ವಿ ಸುಬ್ಬಾ ರೆಡ್ಡಿ ಈ ಆರೋಪಗಳನ್ನು ಖಂಡಿಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಭಕ್ತರ ನಂಬಿಕೆ ಗಟ್ಟಿಗೊಳಿಸಲು ನಾನು ಕುಟುಂಬ ಸಮೇತ ತಿರುಮಲ ಪ್ರಸಾದದ ವಿಚಾರವಾಗಿ ಪರಮಾತ್ಮನ ಮುಂದೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧ. ಚಂದ್ರಬಾಬು ನಾಯ್ಡು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ ಎಂದು ಸುಬ್ಬಾ ರೆಡ್ಡಿ ಸವಾಲು ಹಾಕಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top