ಪುತ್ತೂರು: ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ 17ನೇ ವರ್ಷದ ವಾರ್ಷಕೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” ನ.15 ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಹನುಮಯಾಗದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಗಣಪತಿ ಹವನ, 7.30 ಕ್ಕೆ ಹನುಮಯಾಗದ ಸಂಕಲ್ಪ, 8.30 ರಿಂದ ಭಜನಾ ಕಾರ್ಯಕ್ರಮ ನಡೆದು 10.30 ಕ್ಕೆ ಯಾಗದ ಪೂರ್ಣಾಹುತಿ ನಡೆಯಲಿದೆ.
11.30 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದು, ಶ್ರೀ ಮಾತಾನಂದಮಯಿ ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ, , ಯುವ ಉದ್ಯಮಿ ಉಜ್ವಲ್ ಪ್ರಭು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಒಡಿಯೂರು ತುಳುನಾಡ ಜಾತ್ರೆ ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಒಡಿಯೂರು ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ರೈ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಸಮನ್ವಿ ರೈ (ಸಂಗೀತ) ಹಾಗೂ ಸಮೃದ್ಧಿ ಜೆ. ಶೆಟ್ಟಿ (ಕ್ರೀಡೆ) ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಬಳಿಕ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರಿಂದ ತಾಳಮದ್ದಳೆ ಜರಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಸುಧೀರ್ ನೋಂಡ, ಕಾರ್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ಸದಸ್ಯ ವಿಶ್ವನಾಥ ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ನಯನಾ ರೈ ಉಪಸ್ಥಿತರಿದ್ದರು.
























