ಮಂಗಳೂರು: ಮಂಗಳೂರಿನ ಬಜ್ಪೆ ಸಮೀಪದ ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವಸ್ಥಾನಕ್ಕೆ ನೆಲ್ಲಿದಡಿ ಗುತ್ತು ಕುಟುಂಬಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿರುವ ಎಂಎಸ್ ಇಝೆಡ್ ಅಧಿಕಾರಿಗಳ ಈ ಕ್ರಮವನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಹಿಂದೂ ಮುಖಂಡ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತುಳುನಾಡಿನ ಇತಿಹಾಸದಲ್ಲಿ ಅತ್ಯಂತ ಮಹತ್ವ ಹೊಂದಿರುವ ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವ, ವಿಷ ವೈದ್ಯಕೀಯಕ್ಕೆ ಅತ್ಯಂತ ಹೆಸರುವಾಸಿಯಾಗಿದೆ. ಈಗಾಗಲೇ ಲಕ್ಷಾಂತರ ಜನರು ಇಲ್ಲಿನ ದೈವದ ಪವಾಡದಿಂದ ಜೀವ ಉಳಿಸಿಕೊಂಡಿದ್ದಾರೆ. ಇಷ್ಟೆಲ್ಲ ಮಹತ್ವ ಹೊಂದಿರುವ ನೆಲ್ಲಿದಡಿ ಗುತ್ತಿನ ಪರಿಸ್ಥಿತಿ ಈ ರೀತಿಯಾದರೆ ಮುಂದಿನ ದಿನಗಳಲ್ಲಿ ತುಳುನಾಡಿನ ಎಲ್ಲ ಗುತ್ತು ಮನೆತನಗಳು, ದೈವಸ್ಥಾನಗಳು ನಿರ್ನಾಮವಾಗುವುದು ಶತಸಿದ್ಧ.
ಆ ರೀತಿ ಆಗುವ ಮೊದಲು ಸರಕಾರಗಳು ಎಚ್ಚೆತ್ತು, ಸೂಕ್ತ ವ್ಯವಸ್ಥೆ ಮಾಡಿಕೊಡಬೇಕಾಗಿ ಆಗ್ರಹಿಸುತ್ತೇವೆ. ಇಲ್ಲದಿದ್ದರೆ ಮುಂದೆ ಆಗುವ ದುಷ್ಪರಿಣಾಮಗಳಿಗೆ ಸರಕಾರ ಹಾಗೂ ಎಂಎಸ್ಇಝೆಡ್ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
























