ಉಡುಪಿ: ಪೊಲೀಸರಿಗೆ ಅಪಘಾತ ನಡೆಸಿ ಪರಾರಿಯಾಗಿದ್ದವರನ್ನು ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ಗರುಡ ಗ್ಯಾಂಗ್ ನ ಇಸಾಕ್ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇಸಾಕ್ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ಈ ತಂಡವು ಆರೋಪಿತರ ಜಾಡನ್ನು ಹಿಡಿದು, ಮಾ.12 ರಂದು ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸಾಕ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಬಂಧಿಸಿತ್ತು. ಈ ಎಲ್ಲಾ ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರೆತರುವಾಗ, ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಸಂಜೆ 7.15 ರ ಸುಮಾರಿಗೆ ಆರೋಪಿ ಇಸಾಕ್ ತನಗೆ ತುರ್ತಾಗಿ ವಾಂತಿ ಹಾಗೂ ಮೂತ್ರ ವಿಸರ್ಜನೆ ಮಾಡಲೇಬೇಕೆಂದು ಹಠ ಮಾಡಿದ್ದ. ಅದರಂತೆ ಪೊಲೀಸರು ವಾಹನವನ್ನು ನಿಲ್ಲಿಸಿದ್ದು, ಮೂತ್ರ ವಿಸರ್ಜನೆ ವೇಳೆ ಇಸಾಕ್ ಏಕಾಏಕಿ ಅಲ್ಲೇ ಇದ್ದ ಉಡುಪಿ ಪೊಲೀಸ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ತಳ್ಳಿ ಅವರ ಮೇಲೆ, ಆತನ ಕೈಗೆ ಅಳವಡಿಸಲಾಗಿದ್ದ ಲೀಡಿಂಗ್ ಚೈನ್ ಅನ್ನು ಬಳಸಿ ಬಲವಾಗಿ ಸುತ್ತಿ ದೂಡಿದ್ದ. ನಂತರದಲ್ಲಿ ಇಬ್ಬರು ಪೊಲೀಸ್ ಉಪನಿರೀಕ್ಷಕರು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಅವರಿಗೆ ಇಸಾಕ್ ಬಲವಾಗಿ ಒದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ. ಹೀಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಆತನ ಲೀಡಿಂಗ್ ಚೈನ್ ಪೊಲೀಸ್ ವಾಹನದ ಎದುರಿನ ಗ್ಲಾಸಿಗೆ ಬಡಿಯಿತು. ಇದರಿಂದ, ಗ್ಲಾಸ್ ಒಡೆದು ಅಧಿಕಾರಿ ಹಾಗೂ ಸಿಬ್ಬಂದಿ ಗಾಯಗಳಾಗಿವೆ.
ನಂತರದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ್ ಆತನಿಗೆ ಎಚ್ಚರಿಕೆ ನೀಡಿದ್ದು, ಕೇಳದೆ ಇದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೂ ಕೂಡ ಇಸಾಕ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿದರು. ಗಾಯಗೊಂಡ ಆರೋಪಿ ಇಸಾಕ್ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದೆ.