ಯೂನಿಟ್ಗೆ 36 ಪೈಸೆಯಂತೆ ಹೆಚ್ಚಿಸಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ
ಬೆಂಗಳೂರು : ಈಗಾಗಲೇ ಎಲ್ಲ ಅಗತ್ಯ ವಸ್ತುಗಳ ಮತ್ತು ಸೇವೆಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಸರಕಾರ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹೆಚ್ಚಳದ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡಲು ಕೆಇಆರ್ಸಿ ಮುಂದಾರುವುದರ ಪರಿಣಾಮವಾಗಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಗ್ರಾಹಕರ ಮಾಸಿಕ ಬಿಲ್ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.
ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ವಿದ್ಯುತ್ ದರ ಏರಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬೆಲೆ ಏರಿಕೆ ಒಂದನ್ನೇ ಅನುಷ್ಠಾನ ಮಾಡುತ್ತಿದೆ. ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಕಡೆ ಜನರಿಗೆ ಫ್ರೀ ವಿದ್ಯುತ್ ಎಂದು ಹೇಳುತ್ತಾರೆ. ಪಿಡಬ್ಲ್ಯುಡಿ ಇಲಾಖೆ 8 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ. ಹಲವು ಇಲಾಖೆಗಳು ಬಾಕಿ ಬಿಲ್ ಉಳಿಸಿಕೊಂಡಿವೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದರ ಏರಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. ಮುಂದೆ ಪಾರ್ಕ್, ಗಾಳಿ ಸೇವನೆಗೂ ದರ ವಿಧಿಸಬಹುದು. ಸರ್ಕಾರದ ಮೇಲೆ ಹೊರೆ ಜಾಸ್ತಿ ಆಗುತ್ತಿದೆ. ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ದರ ಏರಿಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸದ ಬೆನ್ನಿಗೆ ಸರಕಾರ ಉಚಿತ ಫಲಾನುಭವಿಗಳಲ್ಲದವರ ವಿದ್ಯುತ್ ದರವನ್ನು ಎರಡು ಪಟ್ಟು ಹೆಚ್ಚು ಮಾಡಿತ್ತು. ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.