1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ
ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು ಭಾಗಿಯಾಗಿದ್ದಾರೆ. ಶೇ.95 ರಷ್ಟು ನಿಖರವಾಗಿ ಸಮೀಕ್ಷೆ ನಡೆಸಲಾಗಿದೆ. ಶೇ.98ರಷ್ಟು ಗ್ರಾಮಾಂತರ ಹಾಗೂ ಶೇ.96ರಷ್ಟು ನಗರ ಪ್ರದೇಶಗಳಲ್ಲಿ ನಡೆದ ಸಮೀಕ್ಷೆಯಲ್ಲಿ 1,01,60,000 ಜನರುಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದು ತಿಳಿಸಿದ್ದಾರೆ.
ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.
ಒಳಮೀಸಲಾತಿ ಜಾರಿಗೆ ತರಲು ಜಸ್ಟಿಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ, ಎಸ್ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.