ಡಿವೈಡರ್ ಹಾರಿದ ಕಾರಿನಿಂದಾಗಿ ಸಂಭವಿಸಿದ ಸರಣಿ ಅಪಘಾತ
ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಕಾರು, ಕಂಟೇನರ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರದತ್ತ ಹೋಗುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಬಸವರಾಜ ರಾಠೋಡ್ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.
ಕಾರಿನಲ್ಲಿ ತೆಲಂಗಾಣ ಮೂಲದ ಪಿ. ಭಾಸ್ಕರ್ ಎಂಬುವರ ಕುಟುಂಬದವರು ಮುರುಡೇಶ್ವರ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸಾಗುತ್ತಿದ್ದರು. ಭಾಸ್ಕರ್ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಟುಂಬದ ಸದಸ್ಯರೊಂದಿಗೆ ದಕ್ಷಿಣ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಿಕೊಂಡು ಬರುತ್ತಿದ್ದಾಗ ದುರಂತ ಸಂಭವಿಸಿದೆ.
ಟಿ ಭಾಸ್ಕರ್ ಹಾಗೂ ಕುಟುಂಬದ ಪವಿತ್ರ, ಅಭಿರಾಮ್ ಹಾಗೂ ಜೋಶ್ನಾ ಎಂಬುವವರು ಅಪಘಾತದಲ್ಲಿ ಸ್ಥಳದಲ್ಲೇ ಅಸುನೀಗಿದ್ದಾರೆ. ಕಾರು ಚಾಲಕ ಹೊರ್ತಿ ಗ್ರಾಮದ ವಿಕಾಸ್ ಮಣಿ ಕೂಡ ಸಾವಿಡಗೀಡಾಗಿದ್ದಾರೆ. ಕಾರಿನಲ್ಲಿದ್ದ 10 ವರ್ಷದ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬಸ್ಸು ಮುಂಬೈಯಿಂದ ಬಳ್ಳಾರಿಗೆ ಪ್ರಯಾಣಿಸುತ್ತಿತ್ತು. ಬಸ್ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳುಹಿಸಿಕೊಡಲಾಗಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಸ್ಪಿ ಶಂಕರ ಮಾರಿಹಾಳ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.