ಮಂಗಳೂರಿನಿಂದ ಬಂಟ್ವಾಳ ತನಕ ಅಂಗಡಿಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚಿದ ಮಾಲೀಕರು
ಮಂಗಳೂರು: ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಿಂಂದ ಬಂಟ್ವಾಳದವರೆಗಿನ ನೂರಾರು ಅಂಗಡಿಮುಂಗಟ್ಟುಗಳು ಬಂದ್ ಆಗಿವೆ. ಮಾಲೀಕರು ಸ್ವಯಂಪ್ರೇರಿತವಾಗಿ ಅಘೋಷಿತ ಬಂದ್ ಆಚರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಬ್ದುಲ್ ರಹಿಮಾನ್ ಮೃತದೇಹವನ್ನು ಕೊಳತ್ತಮಜಲಿಗೆ ಬೆಳಗ್ಗೆ ಸಾಗಿಸುವಾಗ ಅಂಗಡಿಗಳೆಲ್ಲ ಮುಚ್ಚಿದ್ದವು. ಪೊಲೀಸ್ ಬಂದೋಬಸ್ತ್ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್ ಮಾಡಿ ಮುಸ್ಲಿಮ್ ವ್ಯಾಪಾರಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಹೆಚ್ಚುವರಿ ಪೊಲೀಸರ ರವಾನೆ
ವಿಪರೀತ ಮಳೆಯ ನಡುವೆಯೇ ರಹಿಮಾನ್ ಮೃತದೇಹದ ಮೆರವಣಿಗೆ ನಡೆದಿದೆ. ಪ್ರಮುಖ ಜಂಕ್ಷನ್ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ಆರು ಜಿಲ್ಲೆಗಳ ಹೆಚ್ಚುವರಿ ಪೊಲೀಸರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ರವಾನೆ ಮಾಡಲಾಗಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ತಿಂಗಳು ಕಳೆಯುವ ಮೊದಲೇ ಮುಸ್ಲಿಂ ಯುವಕನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಬಂಟ್ವಾಳದ ಕೂರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ(34) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಪಿಕಪ್ ವಾಹನ ಹೊಂದಿರುವ ಅಬ್ದುಲ್ ರಹಿಮಾನ್ ಬಳಿ ಒಂದು ಲೋಡ್ ಮರಳು ಬೇಕು ಎಂದು ದುಷ್ಕರ್ಮಿಗಳು ಕುರಿಯಾಳದ ಇರಾಕೋಡಿಗೆ ಕರೆಸಿಕೊಂಡಿದ್ದರು. ಮರಳು ಇಳಿಸಿದ ಕೆಲವೇ ಕ್ಷಣದಲ್ಲಿ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಬ್ದುಲ್ ರಹೀಂ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ರಹಿಮಾನ್ ಜೊತೆಗಿದ್ದ ಕಲಂದರ್ ಶಾಫಿ ಎಂಬವರಿಗೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗಳಾಗಿದ್ದು. ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬಂಟ್ವಾಳ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ.
ನಾಯಕರ ವಿರುದ್ಧ ಆಕ್ರೋಶ
ರಹೀಂ ಹತ್ಯೆ ಸುದ್ದಿ ಹಬ್ಬುತ್ತಿದ್ದಂತೆ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಇದೀಗ ಅಮಾಯಕ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಸೇರಿದ ಜನ ಆಕ್ರೋಶ ಹೊರಹಾಕಿದ್ದರು.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.