15 ಮಂದಿಯ ತಂಡದಿಂದ ಕೊಲೆ ಎಂದು ಎಫ್ಐಆರ್ ದಾಖಲು
ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಮಧ್ಯಾಹ್ನ ಅಬ್ದುಲ್ ರಹಿಮಾನ್ ಅವರನ್ನು ದುಷ್ಕರ್ಮಿಗಳು ತಲವಾರಿನಿಂದ ಕಡಿದು ಕೊಲೆ ಮಾಡಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿಯಿತ್ತು. ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ರಹಿಮಾನ್ ಹತ್ಯೆ ಪ್ರಕರಣ ಸಂಬಂಧ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿಸಾರ್ ಎಂಬುವವರು ನೀಡಿದ ದೂರಿನ ಅನ್ವಯ, ದೀಪಕ್, ಸುಮಿತ್ ಸೇರಿ ರಹಿಮಾನ್ ಪರಿಚಯಸ್ಥರೇ ಆಗಿರುವ 15 ಜನರ ವಿರುದ್ಧ ದೂರು ದಾಖಲಾಗಿದೆ. ಡಿವೈಎಸ್ಪಿ ವಿಜಯ್ ಪ್ರಕಾಶ್ ನೇತ್ವದಲ್ಲಿ ತನಿಖೆ ನಡೆಯುತ್ತಿದೆ.
ಸದ್ಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 30ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಇರಲಿದೆ. ಈ ಮಧ್ಯೆ ಇಂದು ಮಂಗಳೂರಿಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಭೇಟಿ ನೀಡಿ ಪರಿಶೀಲಿಸಿದರು.