ಅಧಿಕಾರ ಹಂಚಿಕೆ ಸೂತ್ರ ಪಾಲಿಸಲು ಹೈಕಮಾಂಡ್ ಮುಂದೆ ಕೋರಿಕೆ ಇಟ್ಟ ಡಿಕೆಶಿ
ಬೆಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಕಾಂಗ್ರೆಸ್ನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಮತ್ತೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಕ್ಕುಮಂಡಿಸಿದ್ದಾರೆ ಎನ್ನಲಾಗಿದೆ.
ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಒಪ್ಪಂದವನ್ನು ಗೌರವಿಸಬೇಕು ಮತ್ತು 2025ರ ಅಕ್ಟೋಬರ್ನಲ್ಲಿ ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಸಿದ್ದರಾಮಯ್ಯ ಅಧಿಕಾರ ತ್ಯಜಿಸಬೇಕು ಎಂದು ಒತ್ತಾಯಿಸಿದರು ಎಂದು ತಿಳಿದುಬಂದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಹೀಗಾಗಿಯೇ ಪಕ್ಷದ ಇಬ್ಬರು ಹಿರಿಯ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಡಾ.ಜಿ.ಪರಮೇಶ್ವರ್ ಇಬ್ಬರು ನಾಯಕರೊಂದಿಗೂ ಬುಧವಾರ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲಿನ ಇತ್ತೀಚಿನ ಇ.ಡಿ ದಾಳಿ ಕುರಿತು ಚರ್ಚೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಹಿಂದೆ ಇ.ಡಿ ದಾಳಿ ಕುರಿತು ಹೇಳಿಕೆ ನೀಡಿದ್ದ ಡಿಕೆ.ಶಿವಕುಮಾರ್, ನಟಿ ರನ್ಯಾ ರಾವ್ಗೆ ಗೃಹ ಸಚಿವ ಡಾ.ಜಿಪರಮೇಶ್ವರ 25 ಲಕ್ಷದ ಗಿಫ್ಟ್ ಕೊಟ್ಟಿದ್ದಾರೆಂದು ಹೇಳಿದ್ದರು. ಈ ಹೇಳಿಗೆ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಪರಮೇಶ್ವರ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ್ ಅವರೂ ಭೇಟಿ ಮಾಡಿದ್ದು, ಪ್ರಕರಣ ಸಂಬಂಧ ಮಾತುಕತೆ ನಡೆಸಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಅವಸರ ಮಾಡಬಾರದು. ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೈಕಮಾಂಡ್ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರಗೆ ಭರವಸೆ ನೀಡಿದೆ ಎಂದು ತಿಳಿದುಬಂದಿದೆ.