ಸಾವಿಗೆ ಕಾರಣವಾದ ಕ್ರಿಕೆಟ್ ಅಭಿಮಾನ
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ ದುರಂತದಲ್ಲಿ ಮೃತಪಟ್ಟವರಲ್ಲಿ ವಿದ್ಯಾರ್ಥಿಗಳು, ಟೆಕ್ಕಿ, ಇಂಜಿನಿಯರ್ ಕೂಡ ಸೇರಿದ್ದಾರೆ. ತಡರಾತ್ರಿ ಸರ್ಕಾರ ಮೃತಪಟ್ಟ 11 ಜನರ ಮಾಹಿತಿಯನ್ನು ಬಿಡುಗಡೆಮಾಡಿದೆ.
ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ
ಕನಕಶ್ರೀ ಲೇಔಟ್ನಲ್ಲಿ ವಾಸವಿದ್ದ 9ನೇ ತರಗತಿ ವಿದ್ಯಾರ್ಥಿನಿ ದಿವ್ಯಾಂಶಿ (14) ಎಂಬಾಕೆ ಮೃತಪಟ್ಟಿದ್ದು, ಈಕೆ ಶಿವಕುಮಾರ್-ಅಶ್ವಿನಿ ದಂಪತಿಯ ಪುತ್ರಿ. ನಿನ್ನೆ ಮಧ್ಯಾಹ್ನ ತಾಯಿ ಅಶ್ವಿನಿ, ಚಿಕ್ಕಮ್ಮ ರಚನಾ, ದಿವ್ಯಾಂಶ್ರೀ ಸೇರಿ ಕುಟುಂಬದ 4 ಮಂದಿ ಸ್ಟೇಡಿಯಂ ಬಳಿ ಬಂದಿದ್ದರು. ಈ ವೇಳೆ ಕಾಲ್ತುಳಿತವಾಗಿ ದಿವ್ಯಾಂಶ್ರೀ ಸಾವನ್ನಪ್ಪಿದ್ದಾಳೆ.
ಯಲಹಂಕ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ಶಿವು (17) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಈತ ಯಾದಗಿರಿ ಮೂಲದನಾಗಿದ್ದು, ಇವರ ಕುಟುಂಬ ಕಣ್ಣೂರಿನಲ್ಲಿ ವಾಸವಾಗಿತ್ತು. ಈತನ ತಂದೆ ತಾಯಿ ಇಬ್ಬರು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಟೆಕ್ಕಿ ಸಾವು
ಅಮೆಜಾನ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಟೆಕ್ಕಿ ದೇವಿ (25) ಎಂಬವರು ಸಾವನ್ನಪ್ಪಿದ್ದಾರೆ. ಮೂಲತಃ ತಮಿಳುನಾಡಿನ ನಿವಾಸಿಯಾಗಿದ್ದ ಅವರು ಮಾರತ್ ಹಳ್ಳಿ ಬಳಿ ಪಿಜಿಯಲ್ಲಿ ವಾಸವಾಗಿದ್ದರು. ಇವರು ತಂದೆ ತಾಯಿಗೆ ಒಬ್ಬಳೇ ಮಗಳಾಗಿದ್ದರು. ತಂದೆ, ತಾಯಿ ಇಬ್ಬರಿಗೂ ವಯಸ್ಸಾಗಿದ್ದು ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು.
ಇಂಜಿನಿಯರ್ ದುರ್ಮರಣ
ಬೆಂಗಳೂರಿನಲ್ಲಿ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಕೋಲಾರದ ಯುವತಿ ಸಹನಾ (24) ಎಂಬಾಕೆ ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ. ಈಕೆ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದವರಾಗಿದ್ದರು. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಶಿಕ್ಷಕ ದಂಪತಿಯಾದ ಸುರೇಶ ಬಾಬು ಮತ್ತು ಮಂಜುಳಾ ಅವರ ಪುತ್ರಿ ಎಂದು ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರದ ಪೂರ್ಣಚಂದ್ರ ಎಂಬವರು ಸಾವಿಗೀಡಾಗಿದ್ದಾರೆ. ಇವರು ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಹಾಸನ ಜಿಲ್ಲೆಯ ಬೇಲೂರಿನ ಭೂಮಿಕ್ ಎಂಬಾತ ಸಹ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಇವರು ಬೆಂಗಳೂರಿನ 8ನೇ ಮೈಲಿಯ ಸೌಂದರ್ಯ ಕಾಲೇಜಿನ ಬಳಿ ವಾಸವಾಗಿದ್ದರು.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿನ್ಮಯಿ (19) ಎಂಬಾತ ಸಾವನ್ನಪ್ಪಿದ್ದು, ಆರು ಜನರಿಗೆ ಚಿಕಿತ್ಸೆ ನಡೆಯುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ದಿಯಾ (26), ಶ್ರವಣ್ (21), ಮನೋಜ್ ಎಂಬವರು ಸಾವನ್ನಪ್ಪಿದ್ದಾರೆ. ಒಟ್ಟಾರೆ 11 ಜನ ಸಾವಿಗೀಡಾಗಿದ್ದಾರೆ.