ಸುಳ್ಯ: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ಸಂಪಾಜೆ ಗ್ರಾಮದ ಬಾಬು ಮತ್ತು ಚಿನ್ನಮ್ಮ ದಂಪತಿಯ ಪುತ್ರಿ. ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆಯ ಶೇಖರ ಮಲೆಕುಡಿಯ ಅವರ ಧರ್ಮಪತ್ನಿ ಮಧುರಾ (29) ಅವರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು , ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈಗಾಗಲೇ ಮೂರೂವರೆ ವರ್ಷದ ಗಂಡು ಮಗುವಿದ್ದು ಎರಡನೇ ಹೆರಿಗೆಗಾಗಿ ಜೂನ್ 2 ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 3ರ ಸಂಜೆ 6:45ರ ಸುಮಾರಿಗೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು ಆದರೆ ಈ ಸಂತಸ ಕ್ಷಣಿಕವಾಗಿತ್ತು. ರಾತ್ರಿ 9 ಗಂಟೆ ಸುಮಾರಿಗೆ ತೀವ್ರ ರಕ್ತಸ್ರಾವ ಆರಂಭವಾಗಿ, ಸ್ಥಳೀಯ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಪ್ರತಿಷ್ಠಿತ ಲೇಡಿಗೋಶನ್ ಆಸ್ಪತ್ರೆಗೆ ಮಧುರಾರವರನ್ನು ಕರೆತರಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮಧುರಾರವರು ಜೂನ್ 1ರ ನಸುಕಿನ ಜಾವ ಇಹಲೋಕ ತ್ಯಜಿಸಿದರು.
ಮಧುರಾ ಅವರ ಅಕಾಲಿಕ ಮರಣ, ಆಸ್ಪತ್ರೆಯು ಮರಣೋತ್ತರ ಪರೀಕ್ಷೆ ನಡೆಸದೆ ಮೃತದೇಹವನ್ನು ಹಸ್ತಾಂತರಿಸಿರುವುದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಈ ವಿಷಯ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಹಾಗೂ ಇತರ ಮುಖಂಡರ ಗಮನಕ್ಕೆ ಬಂದಿದ್ದು, ತಕ್ಷಣ ಅವರು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಮಲೆಕುಡಿಯ ಸಮುದಾಯ ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.
























