ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್ ವಿರಾಟ್ ಕೊಹ್ಲಿ ಟ್ರೆಂಡಿಂಗ್
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ವಿರಾಟ್ ಕೊಹ್ಲಿ ವಿರುದ್ಧವೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಕೇಸ್ ದಾಖಲಾಗಿದೆ. ಆದರೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಲಂಡನ್ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್ ವಿರಾಟ್ ಕೊಹ್ಲಿ ಟ್ರೆಂಡ್ ಆಗಿದ್ದು, ಇಂತಹ ದುಃಖದ ಸಮಯದಲ್ಲಿ ಈ ಜೋಡಿ ಹೇಗೆ ವಿದೇಶ ಪ್ರವಾಸ ಕೈಗೊಳ್ಳಲು ಸಾಧ್ಯ ಎಂದು ಅನೇಕ ಮಂದಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇದಕ್ಕೂ ತಮಗೂ ಸಂಬಂಧವಿಲ್ಲ ಎಂಬಂತೆ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಬಂಧಿಸಿದೆ. ಆದರೆ ವಿರಾಟ್ ಕೊಹ್ಲಿ ಬಂಧನ ಏಕಿಲ್ಲ ಎಂದು ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ ಆರ್ಸಿಬಿ, ಕೆಎಸ್ಸಿಎ ಮತ್ತು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.
ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಆರ್ಸಿಬಿ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ವಿರುದ್ಧವೂ ಎಫ್ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಆದರೆ ಮೊದಲಿಗೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ದೂರು ದಾಖಲಿಸಿಕೊಂಡಿದ್ದಾರೆ.
ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ ವೆಂಕಟೇಶ್ ಅವರಿಂದ ದೂರು ಸ್ವೀಕರಿಸಿದ್ದು, ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವು ಜನರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆರ್ಸಿಬಿ ತಂಡ ಸಂತಾಪ ಸೂಚಿಸಿದ್ದು, ವಿರಾಟ್ ಕೊಹ್ಲಿ ಆರ್ಸಿಬಿಯ ಸಂತಾಪ ಸಂದೇಶವನ್ನು ಮರುಹಂಚಿಕೊಂಡಿದ್ದಾರೆ. ಕೆಲವರು ಕೊಹ್ಲಿ ಅವರ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಅವರ ಕೆಲಸವನ್ನು ಸಮರ್ಥಿಸಿದ್ದಾರೆ.