ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಬೃಹತ್‌ ಯೋಜನೆ

ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿರುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ ರಸ್ತೆ ನಿರ್ಮಾಣದ ಕುರಿತಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಪತ್ರ ಬಂದಿದ್ದು, ಈ ಯೋಜನೆಯ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಏ.30ರಂದು ಗುತ್ತಿಗೆ ನೀಡಲಾಗಿದೆ. ಈ ಡಿಪಿಆರ್‌ ಸಿದ್ಧಪಡಿಸಲು ಸುಮಾರು 18 ತಿಂಗಳು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಕರಾವಳಿಯ ವಾಣಿಜ್ಯ ಚಟುವಟಿಕೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ಮಹತ್ವದ ಹೆಜ್ಜೆಯಿರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ, ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹಾಗೂ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದ್ದಾರೆ.



















































 
 

ಈ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಹೆದ್ದಾರಿ ನಾಲ್ಕರಿಂದ ಎಂಟು ಪಥಗಳನ್ನು ಹೊಂದುವ ನಿರೀಕ್ಷೆಯಿದ್ದು, ಹಾಸನದ ಮೂಲಕ ಹಾದು ಹೋಗಲಿದೆ. ಈ ಹೆದ್ದಾರಿ ಪಥ ನಿರ್ಮಾಣವಾದರೆ ಎರಡು ಮಹಾನಗರಗಳ ನಡುವಿನ ಸಾರಿಗೆ ಮೂಲಸೌಕರ್ಯ ಮತ್ತಷ್ಟು ಮೇಲ್ದರ್ಜೆಗೇರಲಿದೆ. ಸುಧಾರಿತ ಮಾರ್ಗದಿಂದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಜತೆಗೆ ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣದ ಸಮಯ ಬಹಳ ಕಡಿಮೆ ಮಾಡುತ್ತದೆ ಮತ್ತು ಕರ್ನಾಟಕದ ಪ್ರಮುಖ ನಗರಗಳ ನಡುವೆ ಸುರಕ್ಷಿತ, ಹೆಚ್ಚು ಪರಿಣಾಮಕಾರಿ ಹಾಗೂ ಮಳೆಗಾಲ ಸೇರಿದಂತೆ ಸರ್ವ ಋತುವಿಗೂ ಅಬಾಧಿತವಾಗಿರುವ ಸಂಪರ್ಕ ವ್ಯವಸ್ಥೆ ಒದಗಿಸುತ್ತದೆ. ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೆ ದಕ್ಷಿಣ ಕರ್ನಾಟಕಕ್ಕೆ ಹಾಗೂ ಸುತ್ತಮುತ್ತದ ನಗರಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರು ಹಾಗೂ ಪ್ರವಾಸೋದ್ಯಮ, ವ್ಯಾಪಾರ-ವಾಣಿಜ್ಯ ಚಟುವಟಿಕೆಗಳ ಬೆಳವಣಿಗೆಗೂ ಇನ್ನಷ್ಟು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರು-ಬೆಂಗಳೂರು ಹೈ ಸ್ಪೀಡ್ ಕಾರಿಡಾರ್ ಯೋಜನೆ ಜಾರಿ ಸಂಬಂಧ ಕಳೆದೊಂದು ವರ್ಷದಿಂದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ನಿರಂತರವಾಗಿ ಶ್ರಮ ವಹಿಸುತ್ತಿದ್ದು, ಹಲವು ಬಾರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಹಿತ ಹಲವು ಅಧಿಕಾರಿಗಳು, ಸಚಿವರನ್ನು ಭೇಟಿ ಮಾಡಿದ್ದರು. ಆ ಮೂಲಕ ಈ ಯೋಜನೆ ಕಾರ್ಯಗತಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಹಾಗೂ ಫಾಲೋಅಪ್‌ ಮಾಡುತ್ತಿದ್ದಾರೆ.

ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಪ್ರಸ್ತುತ ಇರುವ 7-8 ಗಂಟೆಗಳಿಂದ ಗಮನಾರ್ಹವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ. ಶಿರಾಡಿ ಘಾಟಿಯಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಕೂಡ ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ. ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವ ಶಿರಾಡಿ ಘಾಟಿ ಸೂಕ್ಷ್ಮ ಪರಿಸರ ವಲಯದಲ್ಲಿರುವುದರಿಂದ ಇಲ್ಲಿ ರಸ್ತೆ ಮತ್ತು ರೈಲು ಮಾರ್ಗವನ್ನು ಸಮಾನಾಂತರವಾಗಿ ಅಭಿವೃದ್ಧಿಸುವ ಸಾಧ್ಯತೆಗಳ ಬಗ್ಗೆ ಅನ್ವೇಷಿಸಲು ರೈಲ್ವೆ ಮಂಡಳಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜಂಟಿ ಸಮಿತಿಯೊಂದನ್ನು ರಚಿಸುವಂತೆ ಮನವಿ ಮಾಡಲಾಗಿದೆ. ಸಂಯೋಜಿತ ಯೋಜನೆ ರೂಪಿಸುವುದರಿಂದ ಅರಣ್ಯ ಮತ್ತು ಪರಿಸರ ಇಲಾಖೆಗಳ ಅನುಮೋದನೆ ಪಡೆಯುವುದು ಸುಲಭವಾಗಲಿದೆ ಎಂದು ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.‌

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top