ಪುತ್ತೂರು: ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಮಂಗಳವಾರ ಪುತ್ತೂರು ಟೌನ್ ಕೋಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು, ದ. ಕ.ಹಾಲು ಒಕ್ಕೂಟ ನಿಯಮಿತ, ಮಂಗಳೂರು, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು.
ದ. ಕ. ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೆ ರವಿರಾಜ್ ಹೆಗ್ಡೆ ಶಿಬಿರ ಉದ್ಘಾಟಿಸಿ ಮಾತನಾಡಿ, ತರಬೇತಿ ಬಹಳ ಪ್ರಮುಖ ಪಾತ್ರ ವಹಿಸಲಿದ್ದು, ಇಂತಹ ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ ಕಾರ್ಯದ ನೈಪುಣ್ಯತೆ ಜೊತೆಗೆ ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ. ಒಕ್ಕೂಟದಿಂದ ಅನೇಕ ಸೌಲಭ್ಯಗಳನ್ನು ರೂಪಿಸಿದ್ದು ಅವುಗಳನ್ನು ಸಂಘವು ಉಪಯೋಗಪಡಿಸಿಕೊಳ್ಳಲು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ದ. ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಸಹಕಾರಿ ಕಾಯಿದೆಯಲ್ಲಿ ಆದ ತಿದ್ದುಪಡಿಗಳನ್ನು ತಿಳಿದುಕೊಳ್ಳಲು ಇಂತಹ ತರಬೇತಿ ಅವಶ್ಯ. ದ. ಕ. ಹಾಲು ಒಕ್ಕೂಟದ ವಿಶೇಷ ಮುತುವರ್ಜಿಯಿಂದ ಅವಿಭಜಿತ ಜಿಲ್ಲೆಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದು ಒಳ್ಳೆಯ ಬೆಳವಣಿಗೆ ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಎಲ್ಲಾ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು ಜಿಲ್ಲಾ ಸಹಕಾರಿ ಯೂನಿಯನ್ ಮುಂದಿನ ದಿನಗಳಲ್ಲಿ ವಿಶೇಷ ರೀತಿಯ ತರಬೇತಿಗಳನ್ನು ಆಯೋಜಿಸಲು ತೀರ್ಮಾನಿಸಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು. ಯೂನಿಯನಿಗೆ ಎಲ್ಲಾ ಸಹಕಾರ ಸಂಘಗಳು ಸದಸ್ಯತ್ವವನ್ನು ಪಡೆದು ಯೂನಿಯನ್ ನನ್ನು ಬಲಪಡಿಸುವಂತೆ ವಿನಂತಿಸಿದರು.
ಕಾರ್ಯಕ್ರಮದಲ್ಲಿ ದ. ಕ.ಹಾಲು ಒಕ್ಕೂಟದ ನಿರ್ದೇಶಕರಾದ ಎಸ್ ಬಿ ಜಯರಾಮ್ ರೈ, ಚಂದ್ರಶೇಖರ ರಾವ್, ಭರತ್ ನೆಕ್ರಾಜೆ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್ ಡಿ, ವ್ಯವಸ್ಥಾಪಕರಾದ ಡಾ. ರವಿರಾಜ್ ಉಡುಪ,
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾದ ವಿಷ್ಣು ಭಟ್, ಮಂಜುನಾಥ ಎನ್ ಎಸ್, ಸವಿತಾ ಎನ್ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್. ಎನ್ ರಘು, ಉಪಸ್ಥಿತರಿದ್ದರು.
ಉಪವ್ಯವಸ್ಥಾಪಕ ಡಾ. ಸತೀಶ್ ರಾವ್, ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ. ಸುಬ್ಬರಾವ್ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ ಸ್ವಾಗತಿಸಿ, ವಂದಿಸಿದರು
























