ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ಸಿಡಿದೆದ್ದಿದ್ದು, ದಿನಕ್ಕೊಂದು ಹೈಡ್ರಾಮಾ ನಡೆಯುತ್ತಿದೆ.
ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಯಾವುದೇ ಹಣವಿಲ್ಲ’ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ.
ಅವರು ಬಾದಾಮಿಯ ಅಗ್ನಿ ಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ್ದು, ನಮ್ಮ ಬಳಿ ದುಡ್ಡಿಲ್ಲ. ಸಿಎಂ ಸಿದ್ದರಾಮಯ್ಯ ಅವರಲ್ಲೂ ಹಣವಿಲ್ಲ. ಅಕ್ಕಿ, ಬೇಳೆ, ಮದ್ಯ ಎಂದು ಎಲ್ಲವನ್ನೂ ಜನರಿಗೆ ನೀಡಿದ್ದೇವೆ. ಬಾದಾಮಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 1000 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿ. ಕೇಂದ್ರ ನೀಡಿದರೆ ಬಾದಾಮಿಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವುದಾಗಿದೆ.
ಈ ಬಗ್ಗೆ ಸದ್ಯ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದು, ನಾನು ಬಾದಾಮಿಯಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಸರ್ಕಾರದ ಬಳಿ ಹಣವಿಲ್ಲ ಎಂದು ನಾನು ಎಂದೂ ಹೇಳಿಲ್ಲ. ಭಾಷಣದ ವೇಳೆಯಲ್ಲಿ ಯಾರೋ ತಮಾಷೆಯಾಗಿ ಕೇಳಿದ ವಿಷಯಕ್ಕೆ ಅದೇ ದಾಟಿಯಲ್ಲಿ ಉತ್ತರ ನೀಡಿದ್ದೇನೆ ಎಂದಿದ್ದಾರೆ.
























