ಉಡುಪಿ ಸಮೀಪ ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ಘಟನೆ
ಉಡುಪಿ: ಜಿಲ್ಲೆಯ ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ದನವನ್ನು ಕಡಿದು ರುಂಡ ಎಸೆದು ಹೋಗಿರುವ ಅಮಾನವೀಯ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮತ್ತು ಹಲವು ಹಿಂದೂ ಮುಖಂಡರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ದಾರೆ.
ಶನಿವಾರ ರಾತ್ರಿ ಸುಮಾರು 11.30 ಸಮಯದಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸಲು ಉದ್ದೇಶಪೂರ್ವಕವಾಗಿ ನಡೆಸದ ಕೃತ್ಯ ಎಂದು ಕಂಡುಬಂದಿದೆ. ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ಕೆರಳಿಸುವ ಉದ್ದೇಶದಿಂದ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಹೀಗಾಗಿ ಇತ್ತೀಚೆಗೆ ಪ್ರಾರಂಭಿಸಲಾಗಿರುವ ಕೋಮು ಹಿಂಸೆ ನಿಗ್ರಹ ಪಡೆ ಇದರ ತನಿಖೆ ನಡೆಸಲಿ ಎಂದು ಅನೇಕ ಮಂದಿ ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸ್ಥಳೀಯರೊಂದಿಗೆ ಮಾಹಿತಿ ಪಡೆದು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಪತ್ತೆಗೆ ಹಿಂದೂ ಸಂಘಟನೆಗಳು ಪಟ್ಟುಹಿಡಿದಿವೆ.
ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕೂಲಂಕುಷ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ಬಗ್ಗೆ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
























