ಅಧಿಕಾರದಲ್ಲಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದಾರೆ.
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ದೂರು ನೀಡಿದ್ದ ವಕೀಲ ವಿನೋದ್ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ. ಜುಲೈ 4ರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಶೀಲನೆಗೆ ಆದೇಶ ಹೊರಡಿಸಿತ್ತು.
























