ಶಿರಾಡಿ ಘಾಟ್ನಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರಿಗೆ ಸಮಸ್ಯೆ
ಮಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ರಸ್ತೆ ಮತ್ತು ರೈಲು ಮಾರ್ಗ ಎರಡರಲ್ಲೂ ಭೂಕುಸಿತ ಸಂಭವಿಸಿದೆ. ಎಡಕುಮೇರಿ ಬಳಿ ಭೂಕುಸಿತವಾಗಿ ಬೆಂಗಳೂರು-ಮಂಗಳೂರು ರೈಲುಗಳು ಸ್ಥಗಿತಗೊಂಡಿವೆ.
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ರಾತ್ರಿಯಿಡೀ ಪರದಾಡಿದ್ದಾರೆ. ಪರದಾಡಿದ್ದಾರೆ.

ಭೂಕುಸಿತ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿವೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ರೈಲು ಸಂಚಾರವೂ ಸ್ಥಗಿತ
ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. ಭಾರಿ ಮಳೆಗೆ ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಹೀಗಾಗಿ ರೈಲು, ಗೂಡ್ಸ್ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಏಳು ಕಿಲೋಮೀಟರ್ ವ್ಯಾಪ್ತಿಯ 15 ಕಡೆಗಳಲ್ಲಿ ಭೂಕುಸಿತವಾಗಿದ್ದು ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲ ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಶ್ರೀವಾಗಿಲು-ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ ಮತ್ತು ಕಡಗರವಳ್ಳಿ-ಡೋಣಿಗಲ್ ವಿಭಾಗಗಳ ನಡುವೆ ಭೂಕುಸಿತದಿಂದ ಉಂಟಾದ ಭಾರಿ ಮಳೆಯಿಂದಾಗಿ, ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ.
























