ಜನಸಂಪರ್ಕ ಕಾರ್ಯಕ್ರಮದಲ್ಲಿ ಕಪಾಲಕ್ಕೆ ಹೊಡೆದ ವ್ಯಕ್ತಿ
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆಂದು ದೆಹಲಿ ಬಿಜೆಪಿ ಘಟಕ ತಿಳಿಸಿದೆ. ಸಿವಿಲ್ ಲೈನ್ಸ್ ಬಳಿಯಿರುವ ತಮ್ಮ ನಿವಾಸದಲ್ಲಿ ಜನ್ ಸುನ್ವಾಯಿ (ಜನಸಂಪರ್ಕ) ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, 30 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾಗೆ ಯಾವುದೇ ಗಾಯವಾಗದಿದ್ದರೂ, ಈ ಘಟನೆ ಅವರನ್ನು ಆಘಾತಕ್ಕೀಡು ಮಾಡಿದೆ. ದಾಳಿಕೋರನನ್ನು ಈಗ ದೆಹಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಜನಸಂಪರ್ಕ ಕಾರ್ಯಕ್ರಮಕ್ಕೆ ರೇಖಾ ಗುಪ್ತ ಆಗಮಿಸಿದ್ದ ವೇಳೆ ವ್ಯಕ್ತಿ ಕೆಲವು ಕಾಗದ ಪತ್ರಗಳೊಂದಿಗೆ ಬಂದಿದ್ದ. ಮನವಿ ಕೊಡುವ ನೆಪದಲ್ಲಿ ಬಂದು ಏಕಾಏಕಿ ಕೂಗಾಡಿ, ಕಪಾಳಮೋಕ್ಷ ಮಾಡಿದ್ದಾನೆ. ಕೂಡಲೇ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.
ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲಿನ ದಾಳಿಯನ್ನು ಮಾಜಿ ಮುಖ್ಯಮಂತ್ರಿ ಅತಿಶಿ ಖಂಡಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಎಂ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ. ಮುಖ್ಯಮಂತ್ರಿ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್ದೇವ ಗುಪ್ತಾ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಈ ದಾಳಿಯನ್ನು ಖಂಡಿಸಿ ಘಟನೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ.
























