ಉಪಯೋಜನೆ ಮೀಸಲು ಅನುದಾನ ಬಳಸಿರುವುದನ್ನು ಒಪ್ಪಿಕೊಂಡ ಸರ್ಕಾರ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನದಲ್ಲಿ 13,433 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.
ಪರಿಶಿಷ್ಟರ ಕಲ್ಯಾಣಕ್ಕೆ ಉಪಯೋಜನೆಯ ಸೆಕ್ಷನ್ 7ಸಿ ಅಡಿ ಸಮುದಾಯದ ಕಾರ್ಯಕ್ರಮಗಳನ್ನು ರೂಪಿಸುವ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಹಣ ಬಳಕೆಗೆ ಅವಕಾಶವಿದೆ. ಅದರಂತೆ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದ್ದೇವೆ. ಎಲ್ಲ ಯೋಜನೆಗಳಲ್ಲೂ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಫಲಾನುಭವಿಗಳ ಪಟ್ಟಿ ನೀಡುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪಟ್ಟಿ ನೀಡದೆ ಇದ್ದರೆ ಉಪಯೋಜನೆಯ ಹಣ ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಆಕ್ಷೇಪಿಸಿದ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, 2025-26ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ SCP/TSP ನಿಧಿಯಿಂದ 13,400 ಕೋಟಿ ರೂ.ಗಳನ್ನು ಬಳಸಲಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಈ ಮೂಲಕ SCP/TSP ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಕಾಯ್ದೆಯ ಪ್ರಕಾರ, SCP/TSP ನಿಧಿಗಳನ್ನು ಸಾಮಾನ್ಯ ಯೋಜನೆಗಳಿಗೆ ಬಳಸಲಾಗುವುದಿಲ್ಲ. ಅದನ್ನು ಸಾಮಾನ್ಯ (ಖಾತರಿ) ಯೋಜನೆಗಳಿಗೆ ಹೇಗೆ ಬಳಸಿದ್ದೀರಿ. ಶಕ್ತಿ ಯೋಜನೆಗೆ 1,500 ಕೋಟಿ ರೂ. ಬಳಸಲಾಗಿದೆ ಎಂದು ನೀವು ಹೇಳಿದ್ದೀರಿ, ಬಸ್ನಲ್ಲಿ ಪ್ರಯಾಣಿಸುವ ಜನರಲ್ಲಿ SC/ST ಎಂದು ನೀವು ಹೇಗೆ ಪ್ರತ್ಯೇಕಿಸುತ್ತೀರಿ? ಎಂದು ಪ್ರಶ್ನಿಸಿದರು.
ಬಿಜೆಪಿ ಸದಸ್ಯ ಎಂ.ಚಂದ್ರಪ್ಪ ಮಾತನಾಡಿ, ಬಜೆಟ್ನಲ್ಲಿ ಎಸ್ಸಿ ಮತ್ತು ಎಸ್ಟಿಗೆ 42,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಆದರೆ ಇಲ್ಲಿಯವರೆಗೆ ಕೇವಲ 7,000 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಇತರ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಈ ರೀತಿ ನೀವು ಹಣವನ್ನು ಬೇರೆಡೆಗೆ ತಿರುಗಿಸುತ್ತಿದ್ದರೆ ನಮಗೆ ಇತರ ಯೋಜನೆಗಳಿಗೆ ಹಣ ಸಿಗುವುದಿಲ್ಲ ಎಂದು ಹೇಳಿದರು.
























