ಲೈಟ್ ಆಫ್ ಮಾಡಿ ಕಲ್ಲು, ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಆರೋಪ
ಬೆಂಗಳೂರು: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಭಾನುವಾರ ರಾತ್ರಿ ಗಣಪತಿ ವಿಗ್ರಹ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರು ನಡೆಸಿದ ಕಲ್ಲು ತೂರಾಟದಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗಿಂದ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.
ಗಣಪತಿ ಮೆರವಣಿಗೆ ಮಸೀದಿ ಮುಂದೆ ಶಾಮತಿಯುತವಾಗಿ ಸಾಗುತ್ತಿರುವಾಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ದಿಢೀರ್ ಮಸೀದಿಯ ಲೈಟ್ ಆಫ್ ಮಾಡಿ ಕಲ್ಲು ಹಾಗೂ ದೊಣ್ಣೆಗಳನ್ನು ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ.
ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಆದರೂ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ. ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆಯಷ್ಟೇ ಅವರು ಈದ್ ಮಿಲಾದ್ ಮೆರವಣಿಗೆ ಮಾಡಿದಾಗ ನಾವು ಗಲಾಟೆ ಮಾಡಿದ್ದೆವಾ ಎಂದು ಹಿಂದೂಗಳು ಪ್ರಶ್ನೆ ಮಾಡಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಗಲಾಟೆ ಸಂಭವಿಸಿತ್ತು. ಇದೀಗ ಮತ್ತೊಂದು ಅದೇ ರೀತಿಯ ಘಟನೆ ಜಿಲ್ಲೆಯಲ್ಲಿ ಮರುಕಳಿಸಿದೆ.
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ರಾಯಚೂರಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶನಿವಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ನಂತರ, ಹಳೆಯ ದ್ವೇಷ ಘಟನೆಗೆ ಕಾರಣ ಎಂಬುದು ತಿಳಿದುಬಂದು ಪರಿಸ್ಥಿತಿ ತಿಳಿಯಾಗಿತ್ತು.
























