ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್‌; ಮೃತರ ಸಂಖ್ಯೆ 8ಕ್ಕೇರಿಕೆ

ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲ.ರೂ. ಪರಿಹಾರ; ಗಾಯಾಳುಗಳಿಗೆ ಚಿಕಿತ್ಸೆ ವೆಚ್ಚ

ಹಾಸನ : ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಸಂಭವಿಸದ ಭೀಕರ ದುರಂತದಲ್ಲಿ ಮೃತಪಟ್ರ ಸಂಖ್ಯ 8ಕ್ಕೇರಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದು ಈ ದುರಂತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.

ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿ ಯಮನಂತೆ ಬಂದ ಟ್ರಕ್, ನೇರವಾಗಿ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.





















































 
 

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ವೈಫಲ್ಯದಿಂದ ಅವಘಡ ಸಂಭವಿಸಿದೆ ಎಂದು ರೇವಣ್ಣ ಕಿಡಿಕಾರಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹ ದುರಂತ ನಡೆದ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಸಂತಾಪ

ಈ ದುರಂತದ ಬಗ್ಗೆ ಕೇಂದ್ರ ಸಚಿವ ಎಚ್​​.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ. ಇದು ಅತಿದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕೆಂದಿದ್ದಾರೆ.

ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಘೋಷಣೆ

ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಘಟನೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top