2,000 ಕಿ.ಮೀ. ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆ ಯಶಸ್ವಿ
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಬುಧವಾರ ರಾತ್ರಿ ರೈಲು-ಆಧಾರಿತ ಮೊಬೈಲ್ ಲಾಂಚರ್ನಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿಯಾದ ಅಗ್ನಿ ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಒಡಿಶಾದ ಬಾಲಾಸೋರ್ನಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಪರೀಕ್ಷೆ ನಡೆಸಲಾಗಿದೆ. ಅಗ್ನಿ-ಪ್ರೈಮ್ ಕ್ಷಿಪಣಿಯು ರೈಲು-ಆಧಾರಿತ ಮೊಬೈಲ್ ಲಾಂಚರ್ನಿಂದ ಯಶಸ್ವಿಯಾಗಿ ಉಡಾವಣೆಗೊಂಡಿದ್ದು, ತನ್ನ ಗುರಿ ನಿಖರವಾಗಿ ತಲುಪಿದೆ. ಈ ಕ್ಷಿಪಣಿಯು 2,000 ಕಿಲೋ ಮೀಟರ್ವರೆಗಿನ ಗುರಿಗಳನ್ನು ತಲುಪುವ ಸಾಮರ್ಥ್ಯ ಹೊಂದಿದೆ.
ವಿಶೇಷವಾಗಿ ವಿನ್ಯಾಸಗೊಳಿಸಲಾದ ಮಿಸೈಲ್ ಸುಧಾರಿತ ಸಂಚರಣೆ, ಮಾರ್ಗದರ್ಶಿ ವ್ಯವಸ್ಥೆ ಹೊಂದದ್ದು, ಹೆಚ್ಚಿನ ನಿಖರತೆಯೊಂದಿಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ. ಅಲ್ಲದೆ ಕ್ಷಿಪಣಿಯು ತ್ವರಿತವಾಗಿ ವಿವಿಧ ಸ್ಥಳಗಳಿಗೆ ಸ್ಥಳಾಂತರಿಸಲು ಮತ್ತು ಉಡಾವಣೆಗೊಳಿಸಲು ಅನುಕೂಲವಾಗಿದೆ. ಈ ಯಶಸ್ವಿ ಪರೀಕ್ಷೆಯಿಂದ ಭಾರತ ಮೊಬೈಲ್ ರೈಲು ಜಾಲಗಳಿಂದ (ಆನ್ ದಿ ಮೂವ್) ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿರುವ ಹಾಗೂ ಕ್ಯಾನಿಸ್ಟರೈಸ್ಡ್ ಉಡಾವಣಾ ವ್ಯವಸ್ಥೆ ಹೊಂದಿರುವ ಆಯ್ದ ದೇಶಗಳ ಗುಂಪಿಗೆ ಸೇರಲಿದೆ.
ರೈಲಿನಿಂದ ಉಡಾಯಿಸಬಹುದಾದ ಮೊಬೈಲ್ ಲಾಂಚರ್ ಮಧ್ಯಂತರ ಶ್ರೇಣಿಯ ʻಅಗ್ನಿ ಪ್ರೈಮ್ ಕ್ಷಿಪಣಿʼಯು 2,000 ಕಿಮೀ ವರೆಗೂ ನುಗ್ಗಿ ತನ್ನ ಗುರಿಯನ್ನ ಹೊಡೆಯುತ್ತದೆ. ಈ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಂದು ಕ್ಷಣದಲ್ಲೂ ಆತ್ಮನಿರ್ಭರಕ್ಕಾಗಿ ಒತ್ತು ನೀಡುವ ಮೂಲಕ ರಕ್ಷಣಾ ಸಾಮರ್ಥ್ಯದಲ್ಲಿ ಸ್ವಾವಲಂಬನೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತ ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಂತರ ಶ್ರೇಣಿಯ ಕ್ಷಿಪಣಿಯ ಯಶಸ್ವಿ ಉಡಾವಣೆ ನಡೆಸಿದೆ. ಅದಕ್ಕಾಗಿ ಭದ್ರತಾ ಪಡೆಗಳು ಹಾಗೂ DRDO, SFCಗೂ ಅಭಿನಂದನೆ ಸಲ್ಲಿಸುತ್ತೇನೆ. ಈ ಮುಂದಿನ ಪೀಳಿಗೆಯ ಕ್ಷಿಪಣಿಯನ್ನು 2000 ಕಿ.ಮೀ.ವರೆಗಿನ ವ್ಯಾಪ್ತಿಯನ್ನು ಕ್ರಮಿಸಲು ವಿನ್ಯಾಸಗೊಳಿಸಲಾಗಿದೆ. ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ ಎಂದು ಎಕ್ಸ್ನಲ್ಲಿ ತಿಳಿಸಿದ್ದಾರೆ.
























