ಲಖನೌ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಚೈತನ್ಯಾನಂದ ಸರಸ್ವತಿ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ. ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ ಸ್ವಾಮೀಜಿ ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016ರಲ್ಲಿ ಸಹ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿದ್ದವು.
ಆರ್ಥಿಕವಾಗಿ ದುರ್ಬಲ ವರ್ಗಗಳ ವಿಭಾಗದಲ್ಲಿ ವಿದ್ಯಾರ್ಥಿವೇತನದೊಂದಿಗೆ ಸ್ನಾತಕೋತ್ತರ ನಿರ್ವಹಣಾ ಡಿಪ್ಲೊಮಾ ಕೋರ್ಸ್ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ, ವಿದೇಶ ಪ್ರವಾಸದ ಆಸೆ ತೋರಿಸಿ ಕಿರುಕುಳ ನೀಡಿದ್ದಾರೆ. ಅದಕ್ಕೆ ಕಾಲೇಜಿನ ಪ್ರಾಧ್ಯಪಕರು, ಹಾಸ್ಟೆಲ್ ವಾರ್ಡನ್ಗಳು ಸಾಥ್ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು.
ಮಹಿಳಾ ಹಾಸ್ಟೆಲ್ನಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆರೋಪಗಳು ಹೊರಬಿದ್ದ ನಂತರ, ಆಶ್ರಮದ ಆಡಳಿತ ಮಂಡಳಿ ಚೈತನ್ಯಾನಂದರನ್ನು ಅವರ ಹುದ್ದೆಯಿಂದ ಹೊರಹಾಕಿತ್ತು.
























