ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉಡುಪಿ ಸೇರಿದಂತೆ ಬೆಂಗಳೂರು, ದಾವಣಗೆರೆ, ಹಾವೇರಿ, ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ), ಉಡುಪಿ ಸಾರಿಗೆ ಇಲಾಖೆ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ) ಲಕ್ಷ್ಮೀನಾರಾಯಣ ಪಿ ನಾಯಕ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ಹಲವು ತಂಡಗಳು ಏಕಕಾಲಕ್ಕೆ ಈ ದಾಳಿಯನ್ನು ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಆದಾಯದ ಮೂಲ, ಬ್ಯಾಂಕ್ ಖಾತೆಗಳು, ಲಾಕರ್ಗಳು ಹಾಗೂ ಆಸ್ತಿ ಸಂಬಂಧಿತ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವೆ. ಇನ್ನೂ ಹಲವು ಗಂಟೆಗಳ ಕಾಲ ಈ ಪರಿಶೀಲನೆ ನಡೆಯಲಿದ್ದು, ನಂತರ ಅಕ್ರಮ ಆಸ್ತಿಗಳ ವಿವರಗಳು ಸಿಗಲಿವೆ. ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು ಮತ್ತು ಅವರ ಹುದ್ದೆಯ ವಿವರ ಈ ಕೆಳಗಿನಂತಿದೆ.
ಜ್ಯೋತಿ ಮೇರಿ: ಪ್ರಥಮ ದರ್ಜೆ ಸಹಾಯಕರು (ಎಫ್ಡಿಎ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ.
ಧೂಳಪ್ಪ: ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಕಲಬುರಗಿ.
ಚಂದ್ರ ಕುಮಾರ್: ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಚಿತ್ರದುರ್ಗ.
ಲಕ್ಷ್ಮೀನಾರಾಯಣ ಪಿ ನಾಯಕ್: ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ), ಸಾರಿಗೆ ಇಲಾಖೆ, ಉಡುಪಿ.
ಮಂಜುನಾಥ್ ಜಿ: ವೈದ್ಯಾಧಿಕಾರಿ, ಮಲ್ಲಸಂದ್ರ ಹೆರಿಗೆ ಆಸ್ಪತ್ರೆ, ಬೆಂಗಳೂರು ನಗರ.
ಜಗದೀಶ್ ನಾಯ್ಕ್: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ), ಕೆಆರ್ಐಡಿಎಲ್, ದಾವಣಗೆರೆ.
ಅಶೋಕ್: ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ (ವಿಎಒ), ರಾಣೇಬೆನ್ನೂರು ತಾಲೂಕು, ಹಾವೇರಿ.
ಬಸವೇಶ್: ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಸವಣೂರು, ಹಾವೇರಿ.
ಚೇತನ್: ಕಿರಿಯ ಇಂಜಿನಿಯರ್, ಆಲಮಟ್ಟಿ ಬಲದಂಡೆ ಕಾಲುವೆ ಕಚೇರಿ, ಬಾಗಲಕೋಟೆ.
ವಿ. ಸುಮಂಗಳಾ: ನಿರ್ದೇಶಕಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಬೆಂಗಳೂರು ನಗರ.
ಬಿ. ಎಸ್. ನಡುವಿನಮನಿ: ಕಿರಿಯ ಇಂಜಿನಿಯರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್ಸಿಎಸ್ಸಿ), ದಾವಣಗೆರೆ.
ಎನ್. ಕೆ. ಗಂಗಾಮರಿ ಗೌಡ: ಸರ್ವೇಯರ್, ವಿಶೇಷ ಭೂಸ್ವಾಧೀನ ಕಚೇರಿ-2, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್), ಬೆಂಗಳೂರು ನಗರ-2.
























