ಸ್ವಂತ ಸೈಟ್ ಆಸೆಯಿಂದ ಕೋಟಿಗಟ್ಟಲೆ ಕಳೆದುಕೊಂಡ ಕಲಾವಿದರು
ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ ನೀಡಿದ ದೂರಿನ ಮೇರೆಗೆ ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಎಂಬವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೆಟಿವಿಎನಲ್ಲಿ ಸೈಟ್ ಕಮಿಟಿ ಸದಸ್ಯನಾಗಿದ್ದ ಸಂಜೀವ್ ತಗಡೂರು ಸದಸ್ಯರಿಗೆ ಸೈಟ್ ಕೊಡಿಸುವುದಾಗಿ ಬಿಲ್ಡರ್ ಜೊತೆಗೆ ವ್ಯವಹಾರ ಕುದುರಿಸಿದ್ದ. ತಾವರೆಕೆರೆ ಬಳಿ ಸೈಟ್ ಕೊಡಿಸುವುದಾಗಿ ಹೇಳಿ ಅಸೋಸಿಯೇಷನ್ ಸದಸ್ಯರಿಂದ ಲಕ್ಷಗಟ್ಟಲೆ ಹಣ ಪಡೆದಿದ್ದ. ಆರ್.ಆರ್ ನಗರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕ್ರಯ ಸಹ ಮಾಡಿಸಲಾಗಿತ್ತು. ಆ ಬಳಿಕ ಖಾತೆ ಮಾಡಿಸಲು ಮೀನಮೇಷ ಎಣಿಸುತ್ತಿದ್ದ. ಈ ವೇಳೆ ಕೆಲ ಸದಸ್ಯರು ಖುದ್ಧಾಗಿ ಖಾತೆ ಮಾಡಿಸಲು ತೆರಳಿದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.
ನಕಲಿ ಲೇಔಟ್ ಪ್ಲಾನ್ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಒಟ್ಟು 1.6 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಭಾವನಾ ಬೆಳಗೆರೆ, ಶರತ್ ಚಂದ್ರ, ರಾಹುಲ್ ಸೇರಿದಂತೆ ಅನೇಕ ಕಲಾವಿದರು ವಂಚನೆಯ ಬಲಿಯಾಗಿದ್ದಾರೆ. ಪ್ರಸ್ತುತ ಆರ್.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
























