ಭ್ರಷ್ಟ ಅಧಿಕಾರಿಯ ಸಂಪತ್ತು ನೋಡಿ ಸಿಬಿಐ ಅಧಿಕಾರಿಗಳಿಗೆ ಶಾಕ್
ಹೊಸದಿಲ್ಲಿ : ಡಿಐಜಿಯೊಬ್ಬರ ಮನೆಯಲ್ಲಿ ಸಂಪತ್ತಿನ ಕೊಪ್ಪರಿಗೆಯೇ ಪತ್ತೆಯಾಗಿದ್ದು, ಇದನ್ನು ನೋಡಿ ಅಧಿಕಾರಿಗಳೇ ದಂಗುಬಡಿದು ಹೋಗಿದ್ದಾರೆ. ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಬೆಲೆಬಾಳುವ ವಾಚ್ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ಸಿಬಿಐ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ ಭ್ರಷ್ಟ ಐಪಿಎಸ್ ಅಧಿಕಾರಿ ಪಂಜಾಬ್ನ ರೋಪರ್ ವಲಯ ಡಿಐಜಿ ಹರ್ಚರಣ್ ಸಿಂಗ್ ಭುಲ್ಲಾರ್ ಅವರ ಸಂಪತ್ತಿನ ಖಜಾನೆ ಕಂಡು ನಿಬ್ಬೆರಗಾಗಿದ್ದು, ಅವರನ್ನುಬಂಧಿಸಿದೆ.
ಹರ್ಚರಣ್ ಸಿಂಗ್ ಭುಲ್ಲರ್ 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ. ಪಂಜಾಬ್ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದು, 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐ ಬಲೆಗೆ ಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಗುಜರಿ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ. 8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್ಹ್ಯಾಂಡಾಗಿ ಡಿಐಜಿ ಹರ್ಚರಣ್ರನ್ನು ಬಂಧಿಸಿದೆ.
5 ಕೋಟಿ ರೂಪಾಯಿಗೂ ಹೆಚ್ಚು ನಗದು, 1.5 ಕೆಜಿ ಚಿನ್ನಾಭರಣ, ನೂರಾರು ಕೋಟಿ ರೂ. ಮೌಲ್ಯದ ನಿವೇಶನ-ಜಮೀನಿನ ದಾಖಲೆ ಪತ್ರಗಳು, ಐಷಾರಾಮಿ ಮರ್ಸಿಡಿಸ್, ಆಡಿ ಕಾರ್ನ ಕೀಗಳು, 22 ದುಬಾರಿ ಬೆಲೆಯ ವಾಚ್ಗಳು, 40 ಲೀಟರ್ ಇಂಪೋರ್ಟೆಡ್ ಮದ್ಯ, ಡಬಲ್ ಬ್ಯಾರಲ್ ಶಾಟ್ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು 1 ಏರ್ಗನ್ ಅನ್ನು ಸಿಬಿಐ ವಶಕ್ಕೆ ಪಡೆದಿದೆ. ಇದಲ್ಲದೆ ಲಂಚದ ಡೀಲ್ ಕುದುರಿಸಿದ್ದ ಮಧ್ಯವರ್ತಿ ಕೃಷ್ಣ ಎಂಬಾತನಿಂದ 21 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಡಿಜಿಐ ಮನೆಯಲ್ಲಿ ರಾತ್ರಿಯಿಡೀ ಶೋಧ ಮುಂದುವರಿದಿದ್ದು, ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ವಿಶೇಷವೆಂದರೆ ದಕ್ಷ ಅಧಿಕಾರಿ ಎಂದೇ ಹೆಸರು ಪಡೆದಿದ್ದ ಐಪಿಎಸ್ ಹರ್ಚರಣ್ ಸಿಂಗ್ ಭುಲ್ಲರ್ ಈವರೆಗೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಡ್ರಗ್ಸ್ ಮಾಫಿಯಾ ವಿರುದ್ಧ ವಿನಾಶದ ವಿರುದ್ಧ ಯುದ್ಧ ಎಂದು ದೊಡ್ಡ ಅಭಿಯಾನವನ್ನೇ ಕೈಗೊಂಡಿದ್ದರು. ಇದರಿಂದಾಗಿಯೇ ಇವರಿಗೆ ಡಿಐಜಿಯಾಗಿ ಬಡ್ತಿ ಸಿಕ್ಕಿತ್ತು. ಆದರೆ ಈಗ ಇವರ ಭ್ರಷ್ಟ ಮುಖವಾಡ ಕಳಚಿಬಿದ್ದಿದೆ.
























