ಮಂಗಳೂರಿನಲ್ಲಿ ನೀಡಿದ ಹೇಳಿಕೆಯಿಂದ ಹೊಸ ಚರ್ಚೆ ಶುರು
ಮಂಗಳೂರು: ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಪದೆಪದೇ ಹೇಳುತ್ತಿದ್ದ ಸಿದ್ದರಾಮಯ್ಯ ಸೋಮವಾರ ದಿಢೀರ್ ಎಂದು ವರಸೆ ಬದಲಿಸಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಊಹಾಪೂಹಗಳಿಗೆ ಕಾರಣವಾಗಿದೆ. ಕೊನೆಗೂ ಸಿಎಂ ಪಟ್ಟದ ಪಟ್ಟನ್ನು ಸಿದ್ದರಾಮಯ್ಯ ಸಡಿಲಿಸಿದರೇ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ.
ಸೋಮವಾರ ಮಂಗಳೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಮಾಧ್ಯಮದವರು 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂದು ಪ್ರಶ್ನಿಸಿದಾಗ, ‘ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದಿದ್ದಾರೆ. ಇಷ್ಟರತನಕ ನಾನೇ ಪೂರ್ಣಾವಧಿಗೆ ಸಿಎಂ ಎಂದು ಘಂಟಾಘೋಷವಾಗಿ ಹೇಳುತ್ತಿದ್ದ ಸಿದ್ದರಾಮಯ್ಯ ಜೊತೆಗೆ ತನ್ನ ಆಪ್ತರಿಂದಲೂ ಆಗಾಗ ಈ ಹೇಳಿಕೆ ಕೊಡಿಸುತ್ತಿದ್ದರು. ಈಗ ಸಿಎಂ ಪಟ್ಟ ನಿರ್ಧಾರವನ್ನು ಹೈಕಮಾಂಡ್ಗೆ ಬಿಟ್ಟಿರುವುದು ಈ ವಿಚಾರದಲ್ಲಿ ಸಿದ್ದರಾಮಯ್ಯ ಮೆತ್ತಗಾದರೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.
ಎರಡೂವರೆ ವರ್ಷದ ಹಿಂದೆ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದು ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಂದಿನಿಂದಲೂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಕುರ್ಚಿ ಕಿತ್ತಾಟ ನಡೆಯುತ್ತಲೇ ಇದೆ. ಈಗ ಮುಖ್ಯಮಂತ್ರಿ ರೇಸ್ನಲ್ಲಿ ಇನ್ನೂ ಹಲವು ಮಂದಿ ಇದ್ದು, ಅಂತಿಮವಾಗಿ ಸಿದ್ದರಾಮಯ್ಯ ಕುರ್ಚಿ ಬಿಡಬೇಕಾಗುತ್ತದೆಯೇ ಎಂಬ ಕುತೂಹಲವೊಂದು ಮೂಡಿದೆ.
ಐದು ವರ್ಷ ನಾನೇ ಸಿಎಂ ಎಂದು ರಾಜಣ್ಣ ಹೇಳಿದ್ದಾರೆ. ಅದು ಅವರ ಸ್ವಂತ ಅಭಿಪ್ರಾಯ. ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿರುವರನ್ನು ತಪ್ಪಿಸಲು ಅಗುವುದಿಲ್ಲ. ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗುವುದಿಲ್ಲ. ಪ್ರಜಾಪ್ರಭುತ್ವ ಹಕ್ಕು ಅವರದು. ಮುಖ್ಯಮಂತ್ರಿ ಆಕಾಂಕ್ಷಿ ಎನ್ನಬಹುದು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಬಜಪೆ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಈ ಹಿಂದೆ ಹಲವು ಬಾರಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು. ಪವರ್ ಶೇರಿಂಗ್ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದರೆ ನಿಮಗೆ ಹೇಳಿದ್ದು ಯಾರು ಎಂದು ಮಾಧ್ಯಮಗಳಿಗೆ ಸಿದ್ದರಾಮಯ್ಯ ಮರು ಪ್ರಶ್ನೆ ಹಾಕುತ್ತಿದ್ದರು. ಪುತ್ರ ಯತೀದ್ರ ಸಿದ್ದರಾಮಯ್ಯ ಅವರಂತೂ ನಿನ್ನೆ ಮೊನ್ನೆಯವರೆಗೂ ಅಪ್ಪಾಜಿಯೇ ಐದು ವರ್ಷ ಸಿಎಂ ಎಂದು ಜಪಿಸುತ್ತಿರುತ್ತಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ಹೇಳಿರುವುದು ಅಚ್ಚರಿಯುಂಟು ಮಾಡಿದೆ.
























