ಕಾಂಗ್ರೆಸ್ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ
ನವದೆಹಲಿ: ಹರಿಯಾಣದಲ್ಲಿ ವೋಟ್ ಚೋರಿ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ.
ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ ವಿರೋಧಿ ಶಕ್ತಿಗಳೊಂದಿಗೆ ಸೇರಿಕೊಂಡು ಭಾರತೀಯ ಚುನಾವಣಾ ಆಯೋಗ (ಇಸಿಐ), ನ್ಯಾಯಾಂಗ ಮತ್ತು ಸಶಸ್ತ್ರ ಪಡೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಹಾಳುಮಾಡುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಸೋಲುಗಳನ್ನು ಒಪ್ಪಿಕೊಳ್ಳುವ ಬದಲು ಕಾಂಗ್ರೆಸ್ ಇವಿಎಂಗಳು ಮತ್ತು ಚುನಾವಣಾ ಆಯೋಗವನ್ನು ದೂಷಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದೆ. ರಾಹುಲ್ ಗಾಂಧಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಪ್ರತಿಯೊಂದು ರಾಜಕೀಯ ಪಕ್ಷವೂ ಚುನಾವಣೆಗೆ ಮೊದಲು ಮತದಾರರ ಪಟ್ಟಿಯ ಪ್ರತಿಗಳನ್ನು ಸ್ವೀಕರಿಸುತ್ತದೆ. ಆಗ ವ್ಯತ್ಯಾಸಗಳನ್ನು ಗುರುತಿಸಬಹುದು. ಯಾವುದೇ ತಪ್ಪು ಇದ್ದಲ್ಲಿ ಅಥವಾ ಅಧಿಕಾರಿಯೊಬ್ಬರು ತಪ್ಪು ಮಾಡಿದರೆ ನಾವು ನ್ಯಾಯಾಲಯಗಳನ್ನು ಸಂಪರ್ಕಿಸಬಹುದು ಎಂದು ರಿಜಿಜು ತಿಳಿಸಿದ್ದಾರೆ.
ನಾವು ವಿರೋಧ ಪಕ್ಷದಲ್ಲಿದ್ದಾಗ ಎಂದಿಗೂ ನ್ಯಾಯಾಲಯಗಳು, ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡಿಲ್ಲ. ಪ್ರಜಾಪ್ರಭುತ್ವವನ್ನು ಪ್ರಶ್ನಿಸಿಲ್ಲ. ನಾವು ವ್ಯವಸ್ಥೆಯೊಳಗೆ ಹೋರಾಡಿ ಜನರ ವಿಶ್ವಾಸವನ್ನು ಗಳಿಸಿದ್ದೇವೆ ಎಂದು ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ.
























