ಅನಾರೋಗ್ಯದಿಂದ ನಿಧನರಾದ ಶತಾಯುಷಿ ತಿಮ್ಮಕ್ಕ
ಬೆಂಗಳೂರು : ವೃಕ್ಷಮಾತೆ ಎಂದೇ ಕರಿಯಲ್ಪಡುತ್ತಿದ್ದ ಸಾಲುಮರದ ತಿಮ್ಮಕ್ಕ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ಪ್ರಾಯವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್ ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲುಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.
ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
























