ವೇತನ ಹೆಚ್ಚಳ, ಹಿಂಬಾಕಿ ಪಾವತಿ ಬೇಡಿಕೆ
ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆಗಸ್ಟ್ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾದಾಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಗಿತ್ತು. ಆದರೆ ಈ ಬಾರಿ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡದೆ ಹಠಾತ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳ ಸಂಬಂಧ ಶನಿವಾರ ಸಾರಿಗೆ ಸಚಿವರ ಜೊತೆಗೆ ಸಭೆ ನಡೆದಿತ್ತು. ಆದರೆ ಬೇಡಿಕೆಗಳ ಈಡೇರಿಕೆ ಸಂಬಂಧ ಒಮ್ಮತಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಜೊತೆಗೆ ನಾಲ್ಕು ಸುತ್ತಿನ ಸಭೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆಗೆ ಮೂರು ಸುತ್ತಿನ ಸಭೆ ನಡೆದಿದ್ದರೂ, ಸರ್ಕಾರ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮತ್ತು ವೇತನ ಹಿಂಬಾಕಿ ನೀಡಲು ಮುಂದಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಇದೀಗ ಸಾರಿಗೆ ನೌಕರರು ಬುಧವಾರದಿಂದ ಮತ್ತೆ ರಾಜ್ಯದ ಎಲ್ಲ ಬಸ್ ಡಿಪೋಗಳಿಗೆ ಭೇಟಿ ನೀಡಿ ಮುಷ್ಕರಕ್ಕೆ ಸಿದ್ದರಾಗಲು ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಿನಾಂಕ ನಿಗದಿ ಮಾಡಿ ಮುಂಚಿತವಾಗಿ ಮಾಹಿತಿ ನೀಡಿದರೆ ಸರ್ಕಾರ ಮತ್ತೆ ಮುಷ್ಕರಕ್ಕೆ ಅಡ್ಡಿ ಮಾಡಬಹುದು ಎಂಬ ಚಿಂತೆ ಸಾರಿಗೆ ಮುಖಂಡರದ್ದು. ಹಾಗಾಗಿ ಈ ಬಾರಿ ದಿನಾಂಕ ನಿಗದಿ ಮಾಡದೆ ಸಾರಿಗೆ ನೌಕರರು ಸರ್ಕಾರಕ್ಕೆ ಟಕ್ಕರ್ ಕೊಡಲು ಪ್ಲ್ಯಾನ್ ಮಾಡಿದ್ದಾರೆ. ಕಾರ್ಮಿಕ ಇಲಾಖೆಗೆ ಮುಷ್ಕರದ ನೋಟಿಸ್ ಕೂಡ ನೀಡದೆ ಏಕಾಏಕಿ ಬಸ್ಸುಗಳ ಸಂಚಾರ ನಿಲ್ಲಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರೋರಾತ್ರಿ ಸಾರಿಗೆ ಮುಖಂಡರು ವಾಟ್ಸಾಪ್ ಮೂಲಕ ಸಂದೇಶ ಕಳಿಸಿ ಬಸ್ ಸಂಚಾರ ನಿಲ್ಲಿಸಲಿದ್ದಾರಂತೆ.
























