ಬೆಳ್ತಂಗಡಿ : ಇಲ್ಲಿನ ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಆಭರಣ ಮಳಿಗೆಯ ವ್ಯವಸ್ಥಾಪಕ ಮಕ್ಕಳ ಮೇಲೆ ವಿನಾಕಾರಣ ಹಲ್ಲೆ ಮಾಡಿದ ಕುರಿತು ದೂರ ಉದಾಖಲಾಗಿದೆ. ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಡಿ.16ರಂದು ಬಿಎನ್ ಎಸ್ u/s 126(2),115(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಡಿ.15ರಂದು ಸೋಮವಾರ ಶಾಲೆಗೆ ರಜೆ ಹಾಕಿ ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆಂದು ಬಂದಿದ್ದರು. ಅಲ್ಲಿ ಸುತ್ತಾಡಿದ ಬಳಿಕ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ‘ಪೃಥ್ವಿ ಆಭರಣ’ ಮಳಿಗೆ ಹಿಂಬದಿಯಲ್ಲಿ ಕುಳಿತು ಮೊಬೈಲ್ನಲ್ಲಿ ಆಟವಾಡುತ್ತಿದ್ದ ವೇಳೆ ಮಕ್ಕಳ ಹೆಸರನ್ನು ಕೇಳಿ ಮುಸ್ಲಿಂ ವಿದ್ಯಾರ್ಥಿಗಳು ಎಂದು ತಿಳಿದು, ಮಕ್ಕಳಿಗೆ ಧರ್ಮದ ಹೆಸರಿನಲ್ಲಿ ನಿಂದನೆ ಮಾಡಿ ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಲು ಹೋಗಿದ್ದ ವಿದ್ಯಾರ್ಥಿಗಳ ಪೋಷಕರೊಂದಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಸಹಿತ ಇತರ ಸಿಬ್ಬಂದಿ ವಾಗ್ವಾದ ನಡೆಸಿ ನಿಂದಿಸಿರುವ ಆರೋಪ ಕೂಡ ಕೇಳಿಬಂದಿದೆ.
ಘಟನೆಯ ವೇಳೆ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಹಲ್ಲೆಯಿಂದ ತಪ್ಪಿಸಿಕೊಂಡು ಓಡಿ ಹೋಗಿ ನಾಪತ್ತೆಯಾಗಿದ್ದನು. ಆ ಬಳಿಕ ರಾತ್ರಿ ಹುಡುಕಾಡಿದಾಗ ಪೋಷಕರ ಕೈಗೆ ಸೇರಿದ್ದಾನೆ. ಸದ್ಯ ಹಲ್ಲೆಯಿಂದ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಕ್ಕಳ ಹೇಳಿಕೆ ದಾಖಲಿಸಿದ ಪೊಲೀಸರು ಡಿ.16 ರಂದು ಮಂಗಳವಾರ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಎಸ್ಡಿಪಿಐ ಪಕ್ಷದ ಮುಖಂಡ ಅಕ್ಬರ್ ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದು, ಮಕ್ಕಳ ಧರ್ಮ ಕೇಳಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಇದು ಖಂಡನೀಯ. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
























