ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್

ಪುತ್ತೂರು: ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಿರುತೆರೆ ಬೆಳ್ಳಿತೆರೆ, ರಂಗಭೂಮಿ ಕಲಾವಿದೆ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಪವಿತ್ರಾ ಹೆಗ್ಡೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ, ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಆಸಕ್ತಿಯನ್ನು ಬೆಳೆಸಿ ಉಳಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿ ಗಾಯಕ ಕಲಾವಿದ ಚಂದ್ರಶೇಖರ್ ಅವರು, ಯಾವುದೇ ಕಲೆಗೆ ಜಾತಿಯ ಕಟ್ಟುಪಾಡುಗಳಿಲ್ಲ. ನಮ್ಮ ಮಧ್ಯೆ ಇರುವ ತಾರತಮ್ಯಗಳನ್ನು ಮೀರಿ ನಿಲ್ಲುವಂತದ್ದು ಕಲೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ತಾವು ಬೆಳೆದು ಬಂದ ದಾರಿಯನ್ನು ವಿವರಿಸಿದರು.





















































 
 

ಅಧ್ಯಕ್ಷತೆ ವಹಿಸಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ನಿರ್ದೇಶಕ ಜಯಂತ್ ನಡುಬೈಲು ಅವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಧನೆಯ ಮೆಟ್ಟಲೇರಿ ಈಗಾಗಲೇ ನಮ್ಮ ಸಂಸ್ಥೆಗೆ ಒಳ್ಳೆಯ ಹೆಸರನ್ನು ತಂದಿದ್ದಾರೆ. ಇದೀಗ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳು ಕೂಡಾ ಪ್ರತಿಭಾವಂತರಾಗಿದ್ದು ಭವಿಷ್ಯದ ಬಗ್ಗೆ ಭರವಸೆಯನ್ನು ಮೂಡಿಸಿದ್ದಾರೆ ಎಂದರು.

ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ. ಪಕ್ಕಳ ಮತ್ತು ಅರ್ಪಿತ್ ಟಿ.ಎ. ಉಪಸ್ಥಿತರಿದ್ದರು.

ಸಾಂಸ್ಕೃತಿಕ, ವಿಜ್ಞಾನ, ವಾಣಿಜ್ಯ, ಸಾಹಿತ್ಯ ಮತ್ತು ಐ ಟಿ ಕ್ಲಬ್ ಗಳ ಮೂಲಕ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಜೆನ್ನಿಫರ್ ಹಾಗೂ ಗ್ರಂಥ ಪಾಲಕಿ ಪ್ರಭಾವತಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಪರಿಮಳಾ ರಾವ್ ಸ್ವಾಗತಿಸಿ, ಕೀರ್ತಿಕಾ ನಿರ್ವಹಿಸಿದರು. ದೀಪಶ್ರೀ ವಂದಿಸಿದರು.

error: Content is protected !!
Scroll to Top