ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ

ಅವಳಿ ಮಕ್ಕಳಲ್ಲಿ ಒಬ್ಬಳನ್ನು ಕಾಲುವೆಗೆ ನೂಕಿ ಹತ್ಯೆ

ಮುಂಬೈ: ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿದ ಕ್ರೂರ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ನಿಯಮ ಇರುವುದರಿಂದ ಮಹಾರಾಷ್ಟ್ರದ ಈ ಪಾಪಿ ತಂದೆ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.

ಪ್ರಾಚಿ ಕೊಲೆಯಾದ ಬಾಲಕಿ. ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ. ಆದರೆ ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಕಾರಣ ಕಾನೂನಿನ ಕಣ್ಣಿಗೆ ಮಣ್ಣೆರಚಲು ಮಗಳನ್ನು ಕೊಂದಿದ್ದಾನೆ.





















































 
 

ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ. ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

ಅಲ್ಲಿಯೇ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ನೀರಿಗೆ ಏನೋ ಬಿದ್ದ ಶಬ್ಧ ಕೇಳಿ ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಫೋಟೋ ವೈರಲ್‌ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

error: Content is protected !!
Scroll to Top