ದಾಖಲೆ 17ನೇ ಬಾರಿಗೆ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು : 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಹಣಕಾಸು ಸಚಿವವರೂ ಆಗಿರುವ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ಅವರು ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಸಾಲಿನಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳಲಿದ್ದಾರೆ.
ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮಾರ್ಚ್ 6ರಿಂದ 27ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 6ರಂದು ಸಿಎಂ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.
ಸಂಪುಟ ಸಭೆಯಲ್ಲಿ ಚರ್ಚೆ ಆದ ವಿಚಾರಗಳ ಬಗ್ಗೆ ಪ್ರತಿಯಿಸಿದ ಅವರು, ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಕ್ಯಾಬಿನೆಟ್ ನಿರ್ಧರಿಸಿದೆ. ಆ ಮೂಲಕ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳಿಂದ ವಿತರಣೆ ಮಾಡಲಾಗುತ್ತಿದ್ದು, ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದರು.
ಎಸ್ಐಆರ್ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಕಾನೂನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ, ಆಳವಾದ ಅಧ್ಯಯನ ಅಗತ್ಯವಿದೆ. ವರದಿ ನೀಡುವಂತೆ ಕಾನೂನು ಇಲಾಖೆಗೆ ಸಂಪುಟ ಸಭೆ ಸೂಚಿಸಿದೆ. ನಮ್ಮ ಇಲಾಖೆ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.
























