ಪುತ್ತೂರು: ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪರಿಶಿಷ್ಟ ಪಂಗಡ ಕಾಲನಿಗಳ ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಸಲ್ಲಿಸಿದ್ದ ಮನವಿಗೆ ಸಕಾರಾತ್ಮಕ ಸ್ಪಂದನ ನೀಡಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಹುತೇಕ ಪ.ಪಂ. ಕಾಲೋನಿಗಳು ಅಭಿವೃದ್ಧಿಯಿಂದ ವಿಮುಖವಾಗಿವೆ. ಅಶೋಕ್ ರೈ ಅವರು ಚುನಾವಣಾ ಸಮಯದಲ್ಲಿ ಅವುಗಳ ಅಭಿವೃದ್ಧಿಯ ಭರವಸೆ ನೀಡಿದ್ದರು. ಈ ಹಿಂದೆಯೂ ಅವರು ಅಭಿವೃದ್ಧಿ ಮಾಡಲು ಅನುದಾನ ನೀಡಿದ್ದು, ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದರು.
ಈ ಹಿನ್ನೆಲೆ ಸರ್ಕಾರ ಒಂದು ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಬಳಸಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿವೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಧ್ಯೇಯ. ಇದುವರೆಗೆ ಅಭಿವೃದ್ಧಿ ಕಾಣದ ರಸ್ತೆಗಳು ಮುಂದಿನ ದಿನಗಳಲ್ಲಿ ಸಂಚಾರಕ್ಕೆ ಯೋಗ್ಯವಾಗಲಿವೆ ಎಂದು ಶಾಸಕ ಅಶೋಕ್ ಕುಮಾರ ರೈ ತಿಳಿಸಿದ್ದಾರೆ.
























