ಅಕ್ರಮವಾಗಿ ಸಂಗ್ರಹಿಸಿಟ್ಟವರ ಮೇಲೆ ದಾಳಿ ; ಕಾಳಸಂತೆಯಲ್ಲಿ 4 ಪಟ್ಟು ದರ
ಬೆಂಗಳೂರು: ಇಸ್ರೆಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ಗ್ಯಾಸ್ ಕೊರತೆಯಾಗಿ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದ ಎಲ್ಲೆಡೆ ಸಿಲಿಂಡರ್ ಇಲ್ಲದೆ ಹೋಟೆಲ್ಗಳು ಮುಚ್ಚಿವೆ. ಈ ನಡುವೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವವರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 316 ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದೆ.
ಈ ಸಂಬಂಧ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗೃಹಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಗೃಹ ಬಳಕೆ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಸಂಬಂಧ ಬೆಂಗಳೂರಿನ ಪೀಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209, ಶಿವಮೊಗ್ಗದಲ್ಲಿ 3, ಯಾದಗಿರಿ-46, ದಾವಣಗರೆಯಲ್ಲಿ 13 ಸಿಲಿಂಡರ್ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ. ಅವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಕೆಜಿಎಫ್ನಲ್ಲಿ ಅಕ್ರಮ ರಿಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜೆನ್ಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಾಣಿಜ್ಯ ಬಳಕೆಯ ಶೇ.20ರಷ್ಟು ಸಿಲಿಂಡರ್ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟೀನ್, ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿ, ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ವಿತರಿಸಲು ಆಹಾರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
ರಾಜ್ಯದೆಲ್ಲೆಡೆ 14.2 kgಯ ಗೃಹ ಬಳಕೆಯ ಒಟ್ಟು 3,86,363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6,371 ಸಿಲಿಂಡರ್ಗಳನ್ನ ವಿತರಿಸಲಾಗಿದೆ. ಗೃಹ ಬಳಕೆಯ ಸಿಲಿಂಡರ್ಗಳ ಉಪಯೋಗಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಆಹಾರ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಗ್ಯಾಸ್ ಸಿಲಿಂಡರ್ಗಳ ಕೊರತೆಯನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ಕಿರಾತಕರು, ಗ್ಯಾಸ್ ಏಜೆನ್ಸಿಗಳ ಸೋಗಿನಲ್ಲಿ ಲಿಂಕ್ಗಳನ್ನು ಕಳುಹಿಸಿ ವಂಚಿಸುವ ಸಾಧ್ಯತೆಯಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ಆತಂಕಗೊಳ್ಳುತ್ತಿರುವ ನಾಗರಿಕರೂ ಗೃಹ ಬಳಕೆಯ ಸಿಲಿಂಡರ್ಗಳಿಗಾಗಿ ಗ್ಯಾಸ್ ಬುಕ್ ಮಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ಖದೀಮರು, ಗ್ಯಾಸ್ ಏಜೆನ್ಸಿಗಳ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸುವ ಸಾಧ್ಯತೆಯಿದೆ. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇರಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.
ಕೆಲವು ದಂಧೆಕೋರರು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ ಎಂದು ಹೋಟೆಲ್ ಮಾಲೀಕರು ಆರೋಪಿಸಿದ್ದಾರೆ. ಮೈಸೂರಿನಲ್ಲೂ ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ಸಿಲಿಂಡರ್ಗೆ 4 ರಿಂದ 5 ಸಾವಿರ ರೂಪಾಯಿ ವರೆಗೆ ಪಡೆದು ಮಾರಾಟ ಮಾಡಲಾಗುತ್ತಿದೆ ಎಂದು ಕೆಲ ಹೋಟೆಲ್ ಮಾಲೀಕರು ತಿಳಿಸಿದ್ದಾರೆ.


























