ಮಡಿಕೇರಿ: ಪೊನ್ನಂಪೇಟೆಯ ಶ್ರೀಮಂಗಲ ಹೋಬಳಿಯಲ್ಲಿ ಕಾಡಾನೆಯೊಂದು ನಡೆಸಿದ ದಾಂಧಲೆಗೆ ಕೃಷಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು ಎಂದು ಗುರುತಿಸಲಾಗಿದೆ.
ಅವರು ಇಂದು ಮುಂಜಾನೆ ಎಂದಿನಂತೆ ತಮ್ಮ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದು, ಈ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿರುವುದಾಗಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷಾ ಹಿನ್ನೆಲೆ ಕುಟ್ಟದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುಮಾರು ಎಂಟರಿಂದ ಹತ್ತು ಕಾಡಾನೆಗಳು ಬೀಡು ಬಿಟ್ಟಿದ್ದು, ಇದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ತೋಟದ ಕೆಲಸಗಾರರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ.

























