ಆದಾಯ ಕರ ಇಲಾಖೆ ರೈಡ್ ನಡೆದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಉದ್ಯಮಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಮಾನಸಿಕ ಖಿನ್ನತೆಯಿಂದ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ವಿಶೇಷ ತನಿಖಾ ತಂಡ ಬಂದಿದೆ.
ಆದಾಯ ತೆರಿಗೆ ಅಧಿಕಾರಿಗಳ ಒತ್ತಡಕ್ಕೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿತ್ತು. ಎಸ್ಐಟಿ ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಸಿ.ಜೆ ರಾಯ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಸಂಬಂಧ ಹಲವು ತಿಂಗಳ ಕಾಲ ಖಿನ್ನತೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕೆಲ ತಿಂಗಳಿನಿಂದ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು ಎಂಬ ವಿಚಾರವನ್ನು ಎಸ್ಐಟಿ ಪತ್ತೆಹಚ್ಚಿದೆ.
ಮೃತಪಡುವ ಒಂದು ತಿಂಗಳ ಹಿಂದೆಯಿಂದ ಮಾತ್ರೆ ಸೇವನೆ ಮಾಡುತ್ತಿರಲಿಲ್ಲ. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಗೆ ನಿಖರವಾದ ಕಾರಣ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಯಾವುದೇ ಒತ್ತಡವೂ ಕಾರಣವಲ್ಲಎನ್ನುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದು ಶೀಘ್ರವೇ ಎಸ್ಐಟಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.
ಬೆಂಗಳೂರಿನ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿ.ಜೆ. ರಾಯ್ ಆದಾಯ ಕರ ಇಲಾಖೆಯ ರೈಡ್ ನಡೆಯುತ್ತಿರುವಾಗಲೇ ಜನವರಿ 30ರಂದು ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಐಟಿ ಅಧಿಕಾರಿಗಳ ವಿಚಾರಣೆಯ ಸಮಯದಲ್ಲಿ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

























