ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪುಷ್ಪಲತಾ ಮಾತನಾಡಿ, ಔಷಧೀಯ ಗಿಡಗಳನ್ನು ಬೆಳೆಸುವ ಹವ್ಯಾಸ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ಮಾತು ವೃಕ್ಷಗಳಿಗೂ ಅನ್ವಯಿಸುತ್ತದೆ. ಮರ ಗಿಡಗಳನ್ನು ನಾವು ರಕ್ಷಿಸಿದರೆ ಅವುಗಳು ನಮ್ಮ ಬದುಕನ್ನು ಹಸನಾಗಿಸುತ್ತವೆ. ವಿವೇಕ ಸಂಜೀವಿನಿ ಎಂಬ ಈ ಸುಂದರ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ ವೃಂದದಲ್ಲಿ ಔಷಧೀಯ ಗಿಡಗಳ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುತ್ತಿರುವುದು ಅತ್ಯುತ್ತಮ ವಿಚಾರ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಸದಸ್ಯ, ನಿವೃತ್ತ ಹಿರಿಯ ವಿಜ್ಞಾನಿ ಕೆ.ಎನ್ ಸುಬ್ರಹ್ಮಣ್ಯ ಭಟ್ ಮಾತನಾಡಿ, ಯುವ ಪೀಳಿಗೆಯಲ್ಲಿ ಔಷಧೀಯ ಗಿಡಗಳ ಬಗ್ಗೆ ಹಾಗೂ ಭಾರತೀಯ ಪಾರಂಪರಿಕ ವೈದ್ಯಕೀಯ ಶಾಸ್ತ್ರವಾದ ಆಯುರ್ವೇದದ ಬಗ್ಗೆ ಆಸಕ್ತಿ ಮೂಡಿಸಲು ಇದು ಸಕಾಲ. ವಿವೇಕ ಸಂಜೀವಿನಿ ಕಾರ್ಯಕ್ರಮದ ಮೂಲಕ ಇಂತಹ ಪ್ರಯತ್ನ ಆಗುತ್ತಿರುವುದು ಶ್ಲಾಘನೀಯ ಎಂದರು.
ಉಪನ್ಯಾಸಕ ಮುರಳಿ ಪಿ ಜಿ ಸ್ವಾಗತಿಸಿ, ಅನುಪಮ ಶೇಟ್ ವಂದಿಸಿದರು. ಉಪನ್ಯಾಸಕಿ ಡಾ. ಶ್ರುತಿ ಎಮ್ ಎಸ್ ಕಾರ್ಯಕ್ರಮ ನಿರೂಪಿಸಿದರು.
























