ಪುತ್ತೂರು: ಬನ್ನೂರು, ಚಿಕ್ಕಮುಡ್ನೂರು, ಪಡ್ನೂರು ಗ್ರಾಮಗಳ ಬನ್ನೂರು ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷರಾಗಿ ಸ್ಮಿತಾ ಎನ್. ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಕುಲಾಲ್ ಸೇಡಿಯಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆ ಆ.17ರಂದು ನಡೆಯಿತು. ಒಟ್ಟು 13 ಸ್ಥಾನಗಳನ್ನು ಹೊಂದಿರುವ ಪಂಚಾಯಿತಿಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೊಂದಿದೆ. ಪ.ಪಂಗಡ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸ್ಮಿತಾ ಎನ್. ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಶೀನಪ್ಪ ಕುಲಾಲ್ ಹಾಗೂ ಶ್ರೀನಿವಾಸ ಪೆರೋಡಿ ನಾಮಪತ್ರ ಸಲ್ಲಿಸಿದ್ದರು. ಆದರೆ ಕೊನೇ ಕ್ಷಣದಲ್ಲಿ ಶ್ರೀನಿವಾಸ ಪೆರೋಡಿಯವರು ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಶೀನಪ್ಪ ಕುಲಾಲ್ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾ ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಯುವ ಮೋರ್ಚಾದ ಅಧ್ಯಕ್ಷ ನವೀನ್ ಪಡ್ನೂರು, ನಗರ ಸಭಾ ಸದಸ್ಯ ಜೀವಂಧರ್ ಜೈನ್, ಬಿಜೆಪಿ ನಗರ ಮಂಡಲದ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಮಂಡಲದ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಟಿ.ಎಸ್., ತಾ.ಪಂ ಮಾಜಿ ಸದಸ್ಯ ಮುಕುಂದ ಬಜತ್ತೂರು, ಬನ್ನೂರು ಗ್ರಾ.ಪಂ ಮಾಜಿ ಸದಸ್ಯರಾದ ರತ್ನಾಕರ ಪ್ರಭು, ತಿಮ್ಮಪ್ಪ ಗೌಡ, ಪೂವಪ್ಪ ದೇಂತಡ್ಕ, ಅಶೋಕ್ ಸೇರಿದಂತೆ ಹಲವು ಮಂದಿ ಪಕ್ಷದ ಪ್ರಮುಖರು ಆಗಮಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.
























