ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆ ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಪಾದಯಾತ್ರೆ ನಡೆಸುತ್ತಿದ್ದ ತಂಡ
ಮಂಗಳೂರು: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ತಂಡದಲ್ಲಿದ್ದ ಇಬ್ಬರುಗುಜರಾತಿನಲ್ಲಿ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ನಿನ್ನೆ ಸಂಭವಿಸಿದೆ. ಇವರಲ್ಲಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ.
ಪಾದಯಾತ್ರಿಗಳು ನಿನ್ನೆ ಮಧ್ಯಾಹ್ನ ಮಾರುತಿ ಓಮ್ನಿ ಕಾರಿನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಗುಜರಾತ್ನ ಸೂರತ್ ನಗರದಿಂದ ಸುಮಾರು 200 ಕಿ.ಮಿ. ದೂರ ಬುಧವಾರ ಮಧ್ಯಾಹ್ನ 2ರ ಸುಮಾರಿಗೆ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರನ್ನು ಪ್ರವೀಣ್ ಎನ್ನಲಾಗಿದೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ದಾರಿ ಮಧ್ಯೆ ರಸ್ತೆ ಬದಿ ಕಾರಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಟ್ರಕ್ ಢಿಕ್ಕಿ ಹೊಡೆದು, ಮೂಸಾ ಶರೀಫ್ ಮತ್ತು ಪ್ರವೀಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದು ಟ್ರಕ್ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಕೆಆರ್ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸಾಮಾಜಿಕ ಹೋರಾಟಗಾರ ಮೂಸಾ ಶರೀಫ್ ಕರ್ನಾಟಕ ಸಾರಥಿಗಳ ಟ್ರೇಡ್ ಯೂನಿಯನ್ ಮುಖಂಡರಾಗಿದ್ದರು. ‘ಬೇಟಿ ಬಚಾವೋ ಬೇಟಿ ಪಢಾವೋ’ ಅಭಿಯಾನದ ಮಧ್ಯೆ ದೇಶದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಕಾಲ್ನಡಿಗೆ ಜಾಥಾ ಹೊರಟಿದ್ದರು.
























