ಪುತ್ತೂರು : ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮದ ಜೊತೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.
ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮುಂದಿನ ಶ್ರೀನಿವಾಸ ಕಲ್ಯಾಣೋತ್ಸವದ ಒಳಗಡೆ ಪುತ್ತೂರಿನಲ್ಲಿ ದೊಡ್ಡ ಗೋಶಾಲೆಯೊಂದನ್ನು ಮಾಡಬೇಕೆಂದು ಸಂದೇಶ ನೀಡಿದ್ದರು. ಅದಕ್ಕೆ ಪೂರಕವಾಗಿ ಅರುಣ್ ಕುಮಾರ್ ಪುತ್ತಿಲ ಅವರು ಈಗಾಗಲೇ ಸರಕಾರಕ್ಕೆ ಗೋ ಶಾಲೆ ಜಾಗಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗುವುದು. ಬಳಿಕ ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಗೋ ಶಾಲೆ ನಿರ್ಮಾಣ ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ದೆಯ ಜೊತೆ ಮೇಲೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಅನೇಕ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಮಾಡಿರುವ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಲೋಪಗಳು, ಒತ್ತಡಗಳು ಬರುವುದು ನಮಗೆಲ್ಲ ಗೊತ್ತಿದೆ. ಆದರೆ ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವ ಸಂದರ್ಭ ಯಾವುದೇ ರೀತಿಯ ಒತ್ತಡಗಳು ಇರದೆ ಕಾರ್ಯಕ್ರಮ ವೈಭವದಿಂದ ನಡೆಯುವುದಕ್ಕೆ ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ಎಂಬುದನ್ನು ನಾನು ಉಲ್ಲೇಖಿಸುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸುಮಾರು 75 ಸಾವಿರದಿಂದ 1ಲಕ್ಷದಷ್ಟು ಮಂದಿ ಅನ್ನಪ್ರಸಾದವನ್ನು ಸ್ವೀಕಾರ ಮಾಡಿ ಪುತ್ತೂರಿನ ಜನರು ಧರ್ಮ ಮತ್ತು ಧಾರ್ಮಿಕತೆಗೆ ಇರುವ ಸಂದೇಶ ನೀಡಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಾಮಾನ್ಯ ಭಕ್ತರಂತೆ ಪಾಲ್ಗೊಂಡು ಉತ್ತಮ ಸಹಕಾರ ನೀಡಿದ್ದಾರೆ. ಅದೇ ರೀತಿ ಮೆಸ್ಕಾಂ ಇಲಾಖೆ, ಅರಣ್ಯ, ನಗರಸಭೆ ಪೂರ್ಣ ಸಹಕಾರ ನೀಡಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಕಲ್ಯಾಣೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಉಪಸ್ಥಿತರಿದ್ದರು.
ಮಾದ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
























